ಕಾಂಗ್ರೆಸ್ ಪಟ್ಟಿ ಬಹುತೇಕ ಅಂತಿಮ: ದ.ಕ.ಕ್ಷೇತ್ರಕ್ಕೆ ಪದ್ಮರಾಜ್‌ಗೆ ಟಿಕೆಟ್ ಖಚಿತ-ಇಂದು ಘೋಷಣೆ

0

ಪುತ್ತೂರು: ರಾಜ್ಯದ 15 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಬಹುತೇಕ ಅಂತಿಮಗೊಂಡಿದ್ದು ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಪದ್ಮರಾಜ್ ಆರ್. ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತಗೊಂಡಿದೆ. ಮಾ.20ರಂದು ಅಧಿಕೃತವಾಗಿ ಘೋಷಣೆಯಾಗಲಿದೆ.


ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ದಕ್ಷಿಣ ಕನ್ನಡ ಸೇರಿದಂತೆ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ. ದ.ಕ.ಲೋಕಸಭಾ ಕ್ಷೇತ್ರಕ್ಕೆ ಪದ್ಮರಾಜ್ ಆರ್.ಹೆಸರು ಅಂತಿಮಗೊಂಡಿದೆ ಎಂದು ವರದಿಯಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಪದ್ಮರಾಜ್ ಆರ್. ಅವರು ವೃತ್ತಿಯಲ್ಲಿ ನ್ಯಾಯವಾದಿಯಾಗಿದ್ದಾರೆ.
ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡು ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಳದ ಬಗ್ಗೆ ಅಪಾರ ಶ್ರದ್ಧೆ ಭಕ್ತಿ ಹೊಂದಿ ಕಿರಿಯ ವಯಸ್ಸಿನಲ್ಲೇ ದೇವಳದ ಜವಾಬ್ದಾರಿ ವಹಿಸಿಕೊಂಡು ಕ್ಷೇತ್ರದ ಏಳಿಗೆಗಾಗಿ ದುಡಿಯುತ್ತಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರುನಲ್ಲಿ ವಾಸ್ತವ್ಯವಿದ್ದ ಮಂಗಳೂರು ಮೂಲದ ಎಚ್.ಎಂ.ರಾಮಯ್ಯ ಪೂಜಾರಿ ಮತ್ತು ಲಲಿತಾ ದಂಪತಿಯ ದ್ವಿತೀಯ ಪುತ್ರನಾಗಿ ಜನಿಸಿದ ಪದ್ಮರಾಜ್‌ರವರು ತನ್ನ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಗಿಸಿ ಮುಂದೆ ಬಿ.ಎ. ಪದವಿಯನ್ನು ಬೆಳ್ತಂಗಡಿಯ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಹಾಗೂ ಕಾನೂನು ಪದವಿಯನ್ನು ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಮುಗಿಸಿದರು. 1995ರಿಂದ ಕಾನೂನು ವೃತ್ತಿಯ ಚೊಚ್ಚಲ ಅಭ್ಯಾಸವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿಯವರೊಂದಿಗೆ ಪ್ರಾರಂಭಿಸಿದ ಇವರು ನಾಲ್ಕು ವರ್ಷಗಳ ಬಳಿಕ ಮಂಗಳೂರಿನ ಬಳ್ಳಾಲ್‌ಬಾಗ್‌ನಲ್ಲಿ ಸ್ವಂತ ಕಚೇರಿ ಪ್ರಾರಂಭಿಸಿದರು. ವೃತ್ತಿ ಜೀವನದ ಆರಂಭದ ಸಮಯದಲ್ಲಿ ಹಿರಿಯ ವಕೀಲರಾದ ಪಿ.ಗಂಗಾಧರ್ ಅವರ ಸಲಹೆಯಂತೆ ಆಗಿನ ಬಿಲ್ಲವರ ಯೂನಿಯನ್ ಸದಸ್ಯರಾದರು. ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳದಿದ್ದರೂ ಬಿ.ಜನಾರ್ದನ ಪೂಜಾರಿಯವರು ಸ್ಪಽಸಿದ ಎಲ್ಲಾ ಚುನಾವಣೆ ಸಂದರ್ಭದಲ್ಲೂ ಅವರಿಗಾಗಿ ದುಡಿದಿದ್ದಾರೆ.


ಕುದ್ರೋಳಿ ದೇವಳದ ಸಖ್ಯ:
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಸಭೆಯಲ್ಲಿ ಆಡಳಿತ ಸಮಿತಿಗೆ ಹೊಸ ಸದಸ್ಯರ ಸೇರ್ಪಡೆ ಬಗೆಗಿನ ಚರ್ಚೆ ನಡೆಯುತ್ತಿದ್ದ ಸಂದರ್ಭ ಪ್ರಸ್ತುತ ಇರುವ ಸದಸ್ಯರಿಗಿಂತ ಅತೀ ಕಿರಿಯ ವಯಸ್ಸಿನ ಪದ್ಮರಾಜ್ ಆರ್. ಹೆಸರನ್ನು ಹಿರಿಯರು ಸೂಚಿಸಿದ ಮೇರೆಗೆ ಕಳೆದ 25 ವರ್ಷದಿಂದ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಽಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಿ.ಜನಾರ್ದನ ಪೂಜಾರಿಯವರ ಅನುಯಾಯಿಯಾಗಿರುವ ಪದ್ಮರಾಜ್ ರಾಮಯ್ಯರವರು ಮಂಗಳೂರಿನ ನವರಾತ್ರಿ ಉತ್ಸವ ವಿಶ್ವ ಪ್ರಸಿದ್ಧಿ ಪಡೆಯಲು ಶ್ರಮ ಪಟ್ಟಿದ್ದಾರೆ.


ಕೊರೊನಾ ಮಹಾಮಾರಿಯಿಂದಾಗಿ 40 ದಿನಗಳ ಲಾಕ್‌ಡೌನ್ ಉಂಟಾದ ಸಂದರ್ಭ ಬಿ.ಜನಾರ್ದನ ಪೂಜಾರಿಯವರ ಆದೇಶದಂತೆ ದಿನಂಪ್ರತಿ ದೇವಸ್ಥಾನದ ವತಿಯಿಂದ ಸುಮಾರು 1000 ಬಡವರು, ನಿರಾಶ್ರಿತರಿಗೆ ಹಾಗೂ ವಲಸೆ ಕೂಲಿ ಕಾರ್ಮಿಕರಿಗೆ ಅನ್ನದಾನ ನಡೆಯುತ್ತಿತ್ತು. ಈ ಸಂದರ್ಭ ಪದ್ಮರಾಜ್ ಅವರೇ ಖುದ್ದಾಗಿ ಸೇವಾದಳದವರೊಂದಿಗೆ ವಿವಿಧ ಪ್ರದೇಶಗಳಿಗೆ ತೆರಳಿ ಅನ್ನದಾನ ವಿತರಣೆಯಲ್ಲಿ ಭಾಗಿಯಾಗುತ್ತಿದ್ದರು. ಪದ್ಮರಾಜ್ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ದೇವಸ್ಥಾನದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ 300 ಕ್ವಿಂಟಾಲ್ ಅಕ್ಕಿದಾನ ಮಾಡಲಾಗಿತ್ತು. ಎರಡನೇ ಲಾಕ್‌ಡೌನ್ ಸಂದರ್ಭದಲ್ಲಿ ತನ್ನದೇ ಆದ ಗುರು ಬೆಳದಿಂಗಳು -ಂಡೇಶನ್ ಮೂಲಕ ಸಹಸ್ರಾರು ನೊಂದವರಿಗೆ ದಿನಸಿ, ಆಹಾರ ಸಾಮಾಗ್ರಿ ತಲುಪಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಗೌರವ ಸಲಹೆಗಾರರು, ಜೆ.ಪಿ.ಪ್ರತಿಷ್ಠಾನ ದ.ಕ. ಜಿಲ್ಲಾ ಗೌರವ ಸಂಚಾಲಕ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯಾದ್ಯಂತ ಅನೇಕ ಸಂಘ ಸಂಸ್ಥೆಗಳಿಂದ ಇವರ ಸಮಾಜಮುಖಿ ಸೇವೆಗೆ ಗೌರವ ಸಂದಿದೆ. ನಮ್ಮ ಕುಡ್ಲ ವಾಹಿನಿ ನೀಡುವ ನಮ್ಮ ಕುಡ್ಲ ಪ್ರಶಸ್ತಿಗೂ ಭಾಜನರಾಗಿದ್ದಾರೆ.

ಬಡವರಿಗೆ ಉಚಿತ ಸೇವೆ
ನೋಟರಿ ವಕೀಲರಾದ ಇವರು ತನ್ನ ನೋಟರಿ ಸಹಿಯನ್ನು ಬಡವರು, ವಿದ್ಯಾರ್ಥಿಗಳ ದೃಢೀಕರಣಕ್ಕೆ ಉಚಿತವಾಗಿ ನೀಡುವ ಮೂಲಕ ಸಮಾಜಕ್ಕೊಬ್ಬ ಮಾದರಿ ವಕೀಲರಾಗಿದ್ದಾರೆ. ಪದ್ಮರಾಜ್‌ರವರು ನಾರಾಯಣ ಗುರುಗಳ ಬಗ್ಗೆ ಅಪಾರ ಕಾಳಜಿ ಹೊಂದಿದವರು. ಇತ್ತೀಚೆಗೆ ನಡೆದ ನಾರಾಯಣ ಗುರುಗಳ ಟ್ಯಾಬ್ಲೋ ನಿರಾಕರಣೆ ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದ ಮೊದಲಿಗರು. ಇವರ ಮುಂದಾಳತ್ವದಲ್ಲಿ ಗುರುಗಳಿಗೆ ಆದ ಅವಮಾನದ ಕುರಿತು ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡಿದ್ದರು. ಇತ್ತೀಚೆಗೆ 10ನೇ ತರಗತಿಯ ಪಠ್ಯಪುಸ್ತಕದ ಸಮಾಜ ವಿಜ್ಞಾನದಲ್ಲಿ ನಾರಾಯಣ ಗುರುಗಳ ಪಠ್ಯ ಕೈಬಿಟ್ಟದ್ದರ ವಿರುದ್ಧ ಮೊದಲು ಖಂಡನೆ ವ್ಯಕ್ತಪಡಿಸಿ ರಾಜ್ಯಾದ್ಯಂತ ಹೋರಾಟ ಮಾಡುವ ಮೂಲಕ ಗುರುಗಳ ಪಠ್ಯವನ್ನು ಸೇರ್ಪಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದರು.

LEAVE A REPLY

Please enter your comment!
Please enter your name here