ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ರೂ.79.09ಕೋಟಿ ದಾಖಲೆ ಲಾಭ,15,540.80 ಕೋ.ರೂ. ಒಟ್ಟು ವ್ಯವಹಾರ – ಪತ್ರಿಕಾಗೋಷ್ಠಿಯಲ್ಲಿ ಡಾ|ಎಂ.ಎನ್.ಆರ್.

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್‌ಸಿಡಿಸಿಸಿ ಬ್ಯಾಂಕ್)ಅಭಿವೃದ್ಧಿಯ ಮುಂಚೂಣಿಯಲ್ಲಿದ್ದು, ತನ್ನ 110 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ತನ್ನ 113 ಶಾಖೆಗಳ ಮೂಲಕ ಉತ್ಕೃಷ್ಠ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆಗೈದು, ದಿನಾಂಕ 31-03-2024ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ 79.09 ಕೋ.ರೂ.ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ “ಸಹಕಾರ” ಎಂಬ ಮನೋಧರ್ಮವನ್ನು ಸಮಾಜಮುಖಿ ಕಾರ್ಯಗಳಲ್ಲಿ ಅಂತರ್ಗತಗೊಳಿಸಿ ಜನಸಾಮಾನ್ಯರ ಬ್ಯಾಂಕ್ ಆಗಿ ಗುರುತಿಸಿಕೊಂಡಿದೆ. ವರದಿ ವರ್ಷದಲ್ಲಿ ರೂ.15540.80 ಕೋಟಿ ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ(ರೂ.13514.51ಕೋಟಿ) ಈ ಬಾರಿ ಶೇ.14.99 ಏರಿಕೆಯನ್ನು ಕಂಡಿದೆ. ಕಳೆದ ವರ್ಷದ ಲಾಭ(ರೂ.61.29 ಕೋಟಿ) ಕ್ಕಿಂತ ಶೇ.29.04 ಏರಿಕೆಯಾಗಿದೆ. ಇದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ. 2024-25ನೇ ಸಾಲಿಗೆ ರೂ.18,000.00 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ ಎಂದು ಹೇಳಿದರು.

7221.37 ಕೋ.ರೂ.ಠೇವಣಿ:
ಠೇವಣಿಗಳ ಸಂಗ್ರಹಣೆಯಲ್ಲಿ ಎಲ್ಲಾ ಬ್ಯಾಂಕ್‌ಗಳಲ್ಲೂ ಸ್ಪರ್ಧೆ ಇದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಎಸ್‌ಸಿಡಿಸಿಸಿ ಬ್ಯಾಂಕ್ ತನ್ನ 113 ಶಾಖೆಗಳ ಮುಖಾಂತರ ಒಟ್ಟು 7221.37 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ. ಈ ಮೂಲಕ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಣೆಗಿಂತ ಈ ಬಾರಿ ಶೇ. 13.33 ಏರಿಕೆಯಾಗಿದೆ.

6485.12 ಕೋ.ರೂ. ಮುಂಗಡ:
ಸ್ಪರ್ಧಾತ್ಮಕ ವ್ಯವಹಾರದಲ್ಲಿ ಬ್ಯಾಂಕ್ ರೂ.6485.12 ಕೋಟಿ ಮುಂಗಡ ನೀಡಿದೆ. ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ರೂ.2032.28 ಕೋಟಿ, ಮಧ್ಯಮಾವಧಿ ಸಾಲ ರೂ.136.99 ಕೋಟಿ, ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು ರೂ.2169.27ಕೋಟಿ ಸಾಲ ನೀಡಲಾಗಿದ್ದು, ಕೃಷಿಯೇತರ ಕ್ಷೇತ್ರಕ್ಕೆ ರೂ.4315.85 ಕೋಟಿ ಸಾಲ ನೀಡಲಾಗಿದೆ. ಕೃಷಿ ಹಾಗೂ ಕೃಷಿಯೇತರ ಸಾಲಗಳ ಹೊರ ಬಾಕಿ ರೂ.8319.43 ಕೋಟಿಯಾಗಿರುತ್ತದೆ.

ಸತತ 29 ವರ್ಷಗಳಿಂದ ಕೃಷಿ ಸಾಲ ಮರುಪಾವತಿಯಲ್ಲಿ ಶೇ.100ರ ಸಾಧನೆ:
ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇ.100ರ ಮರುಪಾವತಿಯನ್ನು ಕಂಡು ದಾಖಲೆ ನಿರ್ಮಿಸಿ ಸಾಧನೆಗೈದಿದೆ. ಇಂತಹ ಸಾಧನೆಯನ್ನು ಕಳೆದ 29ವರ್ಷಗಳಿಂದ ಬ್ಯಾಂಕ್ ಸತತವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.

ಬ್ಯಾಂಕಿನ ಆರ್ಥಿಕ ತಖ್ತೆ:
ಬ್ಯಾಂಕ್‌ಗೆ ಒಟ್ಟು 1072 ಸಂಘಗಳು ಸದಸ್ಯರಾಗಿವೆ. ಇವುಗಳ ಪಾಲು ಬಂಡವಾಳ ರೂ.403.59ಕೋಟಿ ಆಗಿರುತ್ತದೆ. ದುಡಿಯುವ ಬಂಡವಾಳ ರೂ.11379.23 ಕೋಟಿ ಆಗಿದ್ದು, ಇದು ಕಳೆದ ವರ್ಷಕ್ಕಿಂತ (ರೂ.9930.69 ಕೋಟಿ) ಶೇ.14.59ರಷ್ಟು ಏರಿಕೆ ಕಂಡಿದೆ. ಬ್ಯಾಂಕ್ ರೂ.261.00ಕೋಟಿ ವಿವಿಧ ನಿಧಿಗಳನ್ನು ಹೊಂದಿರುತ್ತದೆ. ಶೇ.8.38ರಷ್ಟು ಏರಿಕೆ ಕಂಡಿದೆ.

“ರುಪೇ”(RuPay)ಕಿಸಾನ್ ಕ್ರೆಡಿಟ್ ಕಾರ್ಡ್:
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್ ರುಪೇ (RuPay) ಕಿಸಾನ್ ಕಾರ್ಡ್ನ್ನು ನೀಡಿದೆ. ಈಗಾಗಲೇ 1,37,010 ರುಪೇ ಕಿಸಾನ್ ಕಾರ್ಡ್ಗಳನ್ನು ರೈತರಿಗೆ ವಿತರಿಸಲಾಗಿದೆ. 80,668ರುಪೇ ಡೆಬಿಟ್ ಕಾರ್ಡ್ಗಳನ್ನು ಬ್ಯಾಂಕ್‌ನ ಇತರ ಗ್ರಾಹಕರಿಗೆ ನೀಡಲಾಗಿದೆ.

ಬ್ಯಾಂಕಿನ ಸಾಧನೆ:
ಬ್ಯಾಂಕಿಗೆ 21 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, 19 ಬಾರಿ ನಬಾರ್ಡ್ ಪ್ರಶಸ್ತಿ ದೊರೆತಿದೆ., ಎರಡು ಬಾರಿ “ಎಫ್‌ಸಿಬಿಎ” ರಾಷ್ಟ್ರೀಯ ಪ್ರಶಸ್ತಿಯಿಂದ ಬ್ಯಾಂಕ್ ಪುರಸ್ಕೃತಗೊಂಡಿದೆ. ಬ್ಯಾಂಕಿನ ಸರ್ವಾಂಗೀಣ ಸಾಧನೆಗಾಗಿ ಎರಡು ಬಾರಿ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ ಪ್ರಶಸ್ತಿ” ಲಭಿಸಿದೆ. ಕೇಂದ್ರ ಸರಕಾರದ ಮಹತ್ತರ ಯೋಜನೆಯಾದ “ಅಟಲ್ ಪಿಂಚಣಿ ಯೋಜನೆ”ಯನ್ನು ಬ್ಯಾಂಕ್ ಸಮರ್ಪಕವಾಗಿ ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಚಂದಾದಾರರನ್ನು ನೋಂದಾಯಿಸಿ ವರದಿ ವರ್ಷದಲ್ಲಿ 2 ಬಾರಿ ಭಾರತ ಸರ್ಕಾರದ ಹಣಕಾಸು ಸಚಿವಾಲಯದಿಂದ ಪ್ರಶಸ್ತಿಗೆ ಪಾತ್ರವಾಗಿದೆ. ಸ್ವ ಸಹಾಯ ಗುಂಪುಗಳ ಸಮರ್ಪಕ ಅನುಷ್ಠಾನದಲ್ಲಿ ಬ್ಯಾಂಕ್‌ಗೆ ರಾಜ್ಯದಲ್ಲೇ ಪ್ರಥಮ ಸ್ಥಾನ. ಬ್ಯಾಂಕ್ ಒಟ್ಟು 34,474ಗುಂಪುಗಳನ್ನು ಹೊಂದಿದೆ. ಉಭಯ ಜಿಲ್ಲೆಗಳ ಎಲ್ಲಾ ನವೋದಯ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯೆಯರಿಗೆ ಸಮವಸ್ತ್ರ ವಿತರಣೆಯನ್ನು ಮಾಡಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 156063ರೈತರಿಗೆ ಮಂಗಳಾ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ವಿತರಿಸಲಾಗಿದೆ. 89138 ಕಿಸಾನ್ ಕ್ರೆಡಿಟ್ ಕಾರ್ಡುದಾರರಿಗೆ ವೈಯುಕ್ತಿಕ ಅಪಘಾತ ವಿಮಾ ಸೌಲಭ್ಯವನ್ನು ಒದಗಿಸಲಾಗಿದೆ. ಬ್ಯಾಂಕಿನ ಎಲ್ಲಾ ಶಾಖೆಗಳು ಸಂಪೂರ್ಣ ಗಣಕೀಕೃತಗೊಂಡು ಏಕಗವಾಕ್ಷಿ, ಆರ್.ಟಿ.ಜಿ.ಎಸ್/ನೆಫ್ಟ್ ಹಾಗೂ ಕೋರ್ ಬ್ಯಾಂಕಿಂಗ್‌ನಂತಹ ಉತ್ಕೃಷ್ಟ ಸೇವೆಯನ್ನು ಗ್ರಾಹಕರಿಗೆ ನೀಡುತ್ತಿದೆ. ಬ್ಯಾಂಕಿನ 19ಶಾಖೆಗಳು ಸಂಪೂರ್ಣ ಹವಾನಿಯಂತ್ರಿತವಾಗಿ ಕಾರ್ಯನಿರ್ವಹಿಸುತ್ತಿವೆ. ಬ್ಯಾಂಕ್ ಮಂಗಳೂರಿನ ಕೇಂದ್ರ ಕಛೇರಿಯಲ್ಲಿರುವ ಕೊಡಿಯಾಲ್‌ಬೈಲ್ ಶಾಖೆ ಸೇರಿದಂತೆ ಪುತ್ತೂರು, ಉಪ್ಪಿನಂಗಡಿ, ಸವಣೂರು, ಬೆಳ್ತಂಗಡಿ ಹಾಗೂ ಸಿದ್ಧಾಪುರಗಳಲ್ಲಿರುವ ಶಾಖೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕ್ ಎನ್ನುವ ಆಶಯದೊಂದಿಗೆ ಸುಸಜ್ಜಿತ ವಾಹನದಲ್ಲಿ (Bank on Wheel)ಎಲ್ಲಾ ರೀತಿಯ ಬ್ಯಾಂಕಿಂಗ್ ಸೇವೆಯನ್ನು ಹಾಗೂ ಎ.ಟಿ.ಎಂ. ಸೌಲಭ್ಯವನ್ನು ಕಾರ್ಯರೂಪಕ್ಕೆ ತಂದ ದೇಶದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಹೆಗ್ಗಳಿಕೆ. ಈಗಾಗಲೇ ಮಂಗಳೂರು ಹಾಗೂ ಉಡುಪಿಯಲ್ಲಿ “ಮೊಬೈಲ್ ಬ್ಯಾಂಕಿಂಗ್” ವ್ಯವಸ್ಥೆಯು ಕಾರ್ಯರೂಪದಲ್ಲಿದೆ. ಬ್ಯಾಂಕಿನ ಎಲ್ಲಾ ಶಾಖೆಗಳ ಭದ್ರತೆಯ ಹಿತದೃಷ್ಟಿಯಿಂದ ಸಿಸಿಟಿವಿ ಕೆಮರಾ ಅಳವಡಿಸಲಾಗಿದೆ. ಬ್ಯಾಂಕ್ ಸಿಬ್ಬಂದಿಗಳಿಗೆ ಪಿಂಚಣಿ ಯೋಜನೆಯನ್ನು ಕಾರ್ಯರೂಪಕ್ಕೆ ತಂದ ರಾಜ್ಯದ ಮೊದಲ ಕೇಂದ್ರ ಸಹಕಾರಿ ಬ್ಯಾಂಕ್.

ತರಬೇತಿ ಕೇಂದ್ರ:
ಸಹಕಾರಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅಧ್ಯಕ್ಷರು ಹಾಗೂ ನಿರ್ದೇಶಕರು ಮತ್ತು ಸದಸ್ಯರಿಗೆ ಸಹಕಾರಿ ಕ್ಷೇತ್ರದ ಬಗ್ಗೆ ವಿಶೇಷ ಅನುಭವ ನೀಡಲು ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಸುಸಜ್ಜಿತ ತರಬೇತಿ ಕೇಂದ್ರವನ್ನು ಬ್ಯಾಂಕ್ ಹೊಂದಿದೆ.

ಟ್ಯಾಬ್ ಬ್ಯಾಂಕಿಂಗ್: ಬ್ಯಾಂಕ್ ವ್ಯವಹಾರವನ್ನು ಸರಳೀಕರಿಸುವ ನಿಟ್ಟಿನಲ್ಲಿ ಟ್ಯಾಬ್ ಬ್ಯಾಂಕಿಂಗ್ ವ್ಯವಸ್ಥೆಯನ್ನುಗ್ರಾಹಕರಿಗೆ ಬ್ಯಾಂಕ್ ಪರಿಚಯಿಸಿದೆ. ಮನೆ ಅಥವಾ ಕಛೇರಿಗಳಲ್ಲಿ ಕುಳಿತು ಮೊಬೈಲ್ ಸಂಪರ್ಕವಿರುವ ಬ್ಯಾಂಕಿನ ಟ್ಯಾಬ್ಲೆಟ್ ಬಳಸಿ ತಮ್ಮ ಬ್ಯಾಂಕ್ ಖಾತೆಯನ್ನು ತೆರೆಯುವ ಹಾಗೂ ನಿರ್ವಹಿಸುವ ನೂತನ ವ್ಯವಸ್ಥೆ ಇದಾಗಿದೆ. ಇದರಿಂದ ಗ್ರಾಹಕರು ಪ್ರತಿ ಬಾರಿ ಶಾಖೆಗಳಿಗೆ ಅಲೆದಾಡುವುದು ತಪ್ಪುತ್ತದೆ.

ಮೊಬೈಲ್ ಆ್ಯಪ್ :
ಈ ಯೋಜನೆಯ ಮುಖಾಂತರ ಗ್ರಾಹಕರ ಮೊಬೈಲ್ ಮೂಲಕ ಬ್ಯಾಂಕಿನ ಶಾಖೆಗಳ ನಡುವೆ ಒಂದು ಖಾತೆಯಿಂದ ಮತ್ತೊಂದು ಖಾತೆಗೆ ಹಣ ವರ್ಗಾಯಿಸಬಹುದು. ಅಲ್ಲದೆ ಮೊಬೈಲ್ ಮುಖಾಂತರವೇ ಗ್ರಾಹಕರ ಖಾತೆಯ ವ್ಯವಹಾರದ ವಿಚಾರಣೆ, ಮಿನಿಸ್ಟೇಟ್‌ಮೆಂಟ್ ಹಾಗೂ ಪಾಸ್‌ಬುಕ್ ನಿರ್ವಹಣೆಯ ಸೌಲಭ್ಯ ಪಡೆಯಬಹುದಾಗಿದೆ.

ಎ.ಟಿ.ಎಂ. ಅಳವಡಿಕೆ:
ಬ್ಯಾಂಕಿನ ಮುಖ್ಯ ಶಾಖೆಗಳಲ್ಲಿ ಎಟಿಎಂ ಅಳವಡಿಸಲಾಗಿದ್ದು, ಈಗಾಗಲೇ ಉಭಯ ಜಿಲ್ಲೆಗಳ 14 ಶಾಖೆಗಳಲ್ಲಿ ಎ.ಟಿ.ಎಂ. ಅಳವಡಿಸಲಾಗಿದೆ.

ಮುಂದಿನ ಯೋಜನೆಗಳು:
ಇಂಟರ್ ಬ್ಯಾಂಕ್ ಮೊಬೈಲ್ ಪೇಮೆಂಟ್ ಸಿಸ್ಟಮ್ ಯೋಜನೆ:
IMPS (Inter Bank Mobile Payment System) ಯೋಜನೆಯನ್ನು ಕಾರ್ಯಗತಗೊಳಿಸಲು ಚಿಂತನೆ ನಡೆಸಿದೆ. ಈ ಯೋಜನೆಯಿಂದ ಗ್ರಾಹಕರು ಮೊಬೈಲ್ ಮುಖಾಂತರ ತಮ್ಮ ಖಾತೆಯಿಂದ ಇತರ ಬ್ಯಾಂಕಿನ ಖಾತೆಗೆ ಹಣ ವರ್ಗಾಯಿಸಬಹುದು.
ಇಂಟರ್‌ನೆಟ್ ಬ್ಯಾಂಕಿಂಗ್‌ಸೇವೆ ಶೀಘ್ರದಲ್ಲಿ ಆರಂಭಗೊಳ್ಳಲಿದೆ.

ಭಾರತ್ ಬಿಲ್ ಪೇಮೆಂಟ್ ಸಿಸ್ಟಮ್ (BBPS)ಯೋಜನೆ:
ಇದು ಜನೋಪಯೋಗಿ ಯೋಜನೆಯಾಗಿದೆ. ಇದರಿಂದ ವಿದ್ಯುತ್ ಬಿಲ್, ನೀರಿನ ಬಿಲ್, ಡಿ.ಟಿ.ಎಚ್. ರಿಚಾರ್ಜ್ ಇತ್ಯಾದಿ ಪಾವತಿಗಳನ್ನು ಬ್ಯಾಂಕಿನ ಶಾಖೆಗಳಲ್ಲಿ ನಿರ್ವಹಿಸುವ ಯೋಜನೆ ಇದಾಗಿದೆ.

10 ಹೊಸ ಶಾಖೆಗಳು: ಬ್ಯಾಂಕ್ ಮುಂದಿನ ಅವಧಿಯಲ್ಲಿ10 ಹೊಸ ಶಾಖೆಗಳನ್ನು ತೆರೆಯುವಯೋಜನೆಯನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಟಿ.ಜಿ.ರಾಜರಾಮ ಭಟ್, ಭಾಸ್ಕರ ಎಸ್. ಕೋಟ್ಯಾನ್, ಯಂ. ವಾದಿರಾಜ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಎಸ್.ರಾಜು ಪೂಜಾರಿ, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರಿಶ್ಚಂದ್ರ, ಕೆ. ಜೈರಾಜ್ ಬಿ. ರೈ, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ಕುಶಾಲಪ್ಪ ಗೌಡ ಪಿ., ಎಸ್.ಎನ್. ಮನ್ಮಥ, ಸದಾಶಿವ ಉಳ್ಳಾಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಕೆ.ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here