ರಾತ್ರಿ ವೇಳೆ ದಾರಿ ಕೇಳಿದ ಅಪರಿಚಿತರು- ನಕ್ಸಲರೆಂದು ಭ್ರಮಿಸಿ ಪೋಲಿಸರಿಗೆ ಮಾಹಿತಿ

0

ಕಡಬ: ಅಪರಿಚಿತರು ಮನೆಮಂದಿಯನ್ನು ಎಬ್ಬಿಸಿ ದಾರಿ ಕೇಳಿದ್ದು ಅವರನ್ನು ನಕ್ಸಲರೆಂದು ಭಾವಿಸಿ ಪೊಲೀಸರಿಗೆ ಮಾಹಿತಿ ರವಾನಿಸಿದ ಘಟನೆ ಐತ್ತೂರು ಗ್ರಾಮದಲ್ಲಿ ನಡೆದಿದೆ.
ಮರ್ದಾಳ ಸಮೀಪದ ಐತ್ತೂರು ಗ್ರಾಮದ ವೃತ್ತಿಯಲ್ಲಿ ಜೀಪು ಚಾಲಕರಾಗಿರುವ ಅಮುಣಿಪಾಲ್‌ನ ಕುಶಾಲಪ್ಪ ಗೌಡರ ಮನೆ ಅಂಗಳಕ್ಕೆ ಶನಿವಾರ ತಡರಾತ್ರಿ ಕೇರಳ ನೋಂದಣಿಯ ಜೀಪೊಂದರಲ್ಲಿ ಅಪರಿಚಿತರು ಆಗಮಿಸಿದ್ದರು.

ರಾತ್ರಿ ಸುಮಾರು 1.30ರ ವೇಳೆಗೆ ವಾಹನದ ಹಾರ್ನ್ ಕೇಳಿ ನಿದ್ದೆಯಿಂದ ಎದ್ದು ಬಂದ ಮನೆ ಯಜಮಾನ ಬಾಗಿಲು ತೆರೆದು ನೋಡಿದಾಗ ಜೀಪು ನಿಂತಿರುವುದನ್ನು ಕಂಡು ಗಾಬರಿಯಿಂದ ಬಾಗಿಲು ಹಾಕಿಕೊಳ್ಳಲು ಮುಂದಾಗುವಷ್ಟರಲ್ಲಿ ಜೀಪಿನಿಂದ ಇಳಿದು ಬಂದ ವ್ಯಕ್ತಿಯೊಬ್ಬ ಮಲಯಾಳ ಭಾಷೆಯಲ್ಲಿ ಕೊಣಾಜೆಗೆ ಹೋಗುವ ದಾರಿ ಯಾವುದೆಂದು ಕೇಳಿದ್ದಾನೆ. ಕೊಣಾಜೆಯಲ್ಲಿ ಎಲ್ಲಿಗೆ ಎಂದು ಕೇಳಿದಾಗ ಆತ ತನ್ನ ಮೊಬೈಲ್‌ನಲ್ಲಿ ಯಾರಿಗೋ ಕರೆ ಮಾಡಿ ಕುಶಾಲಪ್ಪ ಗೌಡರಿಗೆ ಕೊಟ್ಟಿದ್ದಾನೆ. ಕರೆ ಸ್ವೀಕರಿಸಿದ ವ್ಯಕ್ತಿ ತುಳುವಿನಲ್ಲಿ ಮಾತನಾಡಲು ಆರಂಭಿಸಿದಾಗ ಕರೆ ಕಡಿತಗೊಂಡಿತು. ಬಳಿಕ ಜೀಪಿನಲ್ಲಿ ಬಂದವರು ಅಲ್ಲಿಂದ ಹೊರಟು ಹೋಗಿದ್ದಾರೆ.
ಮನೆ ಯಜಮಾನನ ಪುತ್ರ ಜೀಪಿನ ನೋಂದಣಿ ಸಂಖ್ಯೆಯನ್ನು ಬರೆದಿಟ್ಟುಕೊಂಡಿದ್ದ ಜೀಪಿನಲ್ಲಿ ಪಾತ್ರೆ ಮರ ಕತ್ತರಿಸುವ ಯಂತ್ರ ಸೇರಿದಂತೆ ಹಲವು ಸಾಮಗ್ರಿಗಳು ಇದ್ದುದನ್ನು ಕಂಡು ನಕ್ಸಲರಾಗಿರಬಹುದೇ ಎನ್ನುವ ಸಂಶಯದಿಂದ ತನ್ನ ಪರಿಚಿತರಿಗೆ ಮಾಹಿತಿ ನೀಡಿದರು. ಬಳಿಕ ಪೊಲೀಸರಿಗೆ ಮಾಹಿತಿ ರವಾನೆಯಾಗಿದೆ.

ಕಡಬ ಪೊಲೀಸರು ಜೀಪಿನ ನೋಂದಣಿ ಸಂಖ್ಯೆ ಆಧಾರದಲ್ಲಿ ಜೀಪಿನ ಮಾಲಕರ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಪತ್ತೆ ಮಾಡಿದಾಗ ಅದು ಕಾಸರಗೋಡು ಮೂಲದ ಟೋಮಿ ಮ್ಯಾಥ್ಯೂ ಅರಿಗೆ ಸೇರಿದ ವಾಹನ ಎಂದು ತಿಳಿದುಬಂದಿತು. ಬಳಿಕ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಚಾರಿಸಿದಾಗ ರಬ್ಬರ್ ತೋಟದ ಕಳೆ ಕತ್ತರಿಸುವ ಕೆಲಸಗಾರರನ್ನು ಕಡಬದ ಕೊಣಾಜೆಗೆ ಕರೆದೊಯುತ್ತಿದ್ದಾಗ ರಾತ್ರಿ ವೇಳೆ ದಾರಿ ತಪ್ಪಿದ್ದರಿಂದ ದಾರಿ ಕೇಳುವುದಕ್ಕಾಗಿ ಮನೆಯವರನ್ನು ಎಬ್ಬಿಸಿದ್ದಾಗಿ ಕರೆ ಸ್ವೀಕರಿಸಿದಾತ ತಿಳಿಸಿದ. ಎಂದು ತಿಳಿದು ಬಂದಿದೆ. ಇದಲ್ಲದೆ ಕುಶಾಲಪ್ಪ ಗೌಡರು ಕೂಡ ರವಿವಾರ ಬೆಳಗ್ಗೆ ಕೊಣಾಜೆಯ ತನ್ನ ಪರಿಚಿತರಲ್ಲಿ ವಿಚಾರಿಸಿದಾಗ ರಾತ್ರಿ ವೇಳೆ ಕೇರಳದಿಂದ ರಬ್ಬರ್ ತೋಟದ ಕೆಲಸಕ್ಕೆ ಜನ ಬಂದಿರುವುದು ದೃಢಪಟ್ಟಿದೆ.

ಬಿಳಿನೆಲೆಯ ಚೇರು ಭಾಗದಲ್ಲಿನ ಮನೆಯೊಂದಕ್ಕೆ ನಕ್ಸಲರು ಭೇಟಿ ನೀಡಿರುವ ಸುದ್ದಿಯಿಂದಾಗಿ ಕಡಬ ಪರಿಸರದಲ್ಲಿನ ಜನರು ಆತಂಕದಲ್ಲಿರುವಾಗಲೇ ಐತ್ತೂರಿನ ಘಟನೆ ಪರಿಸರದ ಜನರಲ್ಲಿ ಮತ್ತೆ ಭೀತಿಗೆ ಕಾರಣವಾಗಿತ್ತು. ಕೊನೆಗೂ ಪೊಲೀಸರ ಸಕಾಲಿಕ ಕ್ರಮದಿಂದಾಗಿ ಐತ್ತೂರಿಗೆ ಬಂದವರು ನಕ್ಸಲರಲ್ಲ ಎನ್ನುವುದು ತಿಳಿದು ಸ್ಥಳೀಯರು ನಿಟ್ಟುಸಿರು ಬಿಟ್ಟರು.

LEAVE A REPLY

Please enter your comment!
Please enter your name here