ಮೋದಿಯವರು ಮತ್ತೆ ಪ್ರಧಾನಿಯಾಗುವುದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ-ಬಿಜೆಪಿ ಅಭ್ಯರ್ಥಿಪರ ಚುನಾವಣಾ ಪ್ರಚಾರ ಸಭೆಯಲ್ಲಿ ಬಿ.ವೈ.ವಿಜಯೇಂದ್ರ

0

ವಿಟ್ಲ: ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ 28 ಸ್ಥಾನಗಳಲ್ಲಿಯೂ ಗೆಲುವು ಸಾಧಿಸುವುದು ನಿಶ್ಚಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಯಡಿಯೂರಪ್ಪರವರಿಗೆ ಹಾಗೂ ಅವಿಭಜಿತ ದ.ಕ.ಜಿಲ್ಲೆಗೆ ಅವಿನಾಭಾವ ಸಂಬಂಧವಿದ್ದು, ಹಿಂದುತ್ವದ ತವರೂರು ದ.ಕ.ಜಿಲ್ಲೆಯವರಿಗೆ ಮತ್ತೆ ಹಿಂದುತ್ವದ ಪಾಠವನ್ನು ತಿಳಿಸಿಕೊಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರು ಹೇಳಿದರು.


ಬಿಸಿರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಕೇಂದ್ರದಲ್ಲಿ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ರಕ್ತದಲ್ಲಿ ಹಿಂದುತ್ವದ ಕಣಗಳಿರುವ ದ.ಕ.ಜಿಲ್ಲೆಯ ಜನ
ಕ್ಯಾ| ಬ್ರಿಜೇಶ್ ಚೌಟ ರವರನ್ನು ಮೂರು ಲಕ್ಷಕ್ಕಿಂತಲೂ ಅಧಿಕ ಮತಗಳಿಂದ ಗೆಲ್ಲಿಸಿ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ವಿಜಯೇಂದ್ರ ಹೇಳಿದರು.


ದಿನದ ಒಂದು ಘಳಿಗೆಯೂ ವಿಶ್ರಾಂತಿ ಪಡೆಯದೆ ನಿರಂತರವಾಗಿ ದೇಶದ ಬಗ್ಗೆ ಚಿಂತನೆ ಮಾಡುವ ,ನುಡಿದಂತೆ ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಗತ್ತಿನಲ್ಲಿ ಶ್ರೇಷ್ಠ ವ್ಯಕ್ತಿಯಾಗಿದ್ದಾರೆ. ದೇಶದಲ್ಲಿ ವಯಸ್ಸಿನ ಇತಿಮಿತಿ ಇಲ್ಲದೆ ಮೋದಿಯವರ ಪರ ಒಲವು, ಆತ್ಮ ವಿಶ್ವಾಸವಿದ್ದು, ಬೇರೆ ಬೇರೆ ಪಕ್ಷಗಳಿಂದ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದಾರೆ. ವಿಧಾನ ಸಭೆಯಲ್ಲಿ ಪಾಕಿಸ್ತಾನಕ್ಕೆ ಜೈಕಾರ ಕೂಗುವ ದೇಶದ್ರೋಹಿಗಳನ್ನು ರಕ್ಷಣೆ ಮಾಡುವ ಕೆಲಸ ಕಾಂಗ್ರೆಸ್ ನಿಂದ ನಡೆಯುತ್ತಿದ್ದು, ಇದರಿಂದ ಜನತೆ ಆತಂಕಪಡುವಂತಾಗಿದೆ. ಹುಬ್ಬಳ್ಳಿ ಘಟನೆಯ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ನೀಡಿದ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ವೈಯಕ್ತಿಕ ಕಾರಣಕ್ಕಾಗಿ ಕೊಲೆ ನಡೆದಿದೆ ಎಂದಾದರೆ ರಾಜ್ಯದಲ್ಲಿ ಯಾರು, ಯಾರನ್ನೂ ಕೊಲೆ ಮಾಡಬಹುದಾ ಎಂದು ಪ್ರಶ್ನಿಸಿದ ವಿಜಯೇಂದ್ರ ಇದೊಂದು ರೀತಿಯಲ್ಲಿ ಪರೋಕ್ಷವಾಗಿ ಅಲ್ಪಸಂಖ್ಯಾತರ ರಕ್ಷಣೆ ಕಾರ್ಯವಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರ ಬಗ್ಗೆ ಒಲವು ತೋರಿಸುವ ತುಷ್ಟೀಕರಣದ ನೀತಿ ಅನುಸರಿಸುತ್ತಿದೆ ಪ್ರತಿ ಹಂತದಲ್ಲಿ ಕೊಲೆಗಡುಕರನ್ನು ರಕ್ಷಣೆ ಮಾಡುವ ಕಾಂಗ್ರೆಸ್ ಮನಸ್ಥಿತಿಯಿಂದ ರಾಜ್ಯದಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ನ ನೀಚ ಮನಸ್ಥಿತಿಯ ಆಡಳಿತದಿಂದ ಮನೆಯಿಂದ ಹೊರಗೆ ಹೋದ ಹೆಣ್ಮಕ್ಕಳು ಸಂಜೆ ಸುರಕ್ಷಿತವಾಗಿ ಮನೆಗೆ ಸೇರುತ್ತಾರಾ? ಎಂಬ ಹೆದರಿಕೆ ರಾಜ್ಯದ ಜನತೆಯಲ್ಲಿ ಕಾಡುತ್ತಿದೆ ಎಂದು ತಿಳಿಸಿದರು.


ದ.ಕ. ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ಸ್ವತಂತ್ರ ಭಾರತದಲ್ಲಿ ಈ ಬಾರಿಯ ಚುನಾವಣೆ ಅತ್ಯಂತ ವಿಶೇಷ ಚುನಾವಣೆಯಾಗಿದೆ. ನರೇಂದ್ರ ಮೋದಿಯವರು ಕಳೆದ 10 ವರ್ಷಗಳಲ್ಲಿ ಭಾರತವನ್ನು ಬೆಳೆಸಿಕೊಂಡ ರೀತಿ ಅದ್ಭುತವಾಗಿದೆ.


ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿಯನ್ನು ಹೋಗಲಾಡಿಸಿ,ಭಯಮುಕ್ತ, ಲಂಚ ಮುಕ್ತ, ಸಮೃದ್ದ ಭಾರತವಾಗುವಲ್ಲಿ ಮೋದಿಯವರು ಕಾರಣರಾಗಿದ್ದಾರೆ. ಮೋದಿಯವರ ಇಚ್ಛಾಶಕ್ತಿ, ನಾವು ನೀಡಿದ ಶಕ್ತಿಯನ್ನು ಬಳಸಿಕೊಂಡು ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮನ ಮಂದಿರ ನಿರ್ಮಾಣವಾಗಿದೆ. ರಾಷ್ಟ್ರ ವಿರೋಧಿ ಮಾನಸಿಕತೆಯ ವಿರುದ್ದ ಹೋರಾಟ ನಿರಂತರವಾಗಲಿದ್ದು, ಎ.26 ರಂದು ಚುನಾವಣೆ ನಡೆಯುವವರೆಗೂ ಬಿಜೆಪಿಯ ವಿಚಾರವನ್ನು ಪ್ರತಿ ಮನ, ಮನೆಗೂ ತಿಳಿಸುವ ಕಾರ್ಯ ಮಾಡಿ. ಕರ್ನಾಟಕದಲ್ಲಿ 28 ಕ್ಕೆ 28 ಸ್ಥಾನಗಳನ್ನೂ ವಿಜಯೇಂದ್ರ ಅವರ ನೇತೃತ್ವದಲ್ಲಿ ಪಡೆಯುವುದರಲ್ಲಿ ಯಾವುದೇ ಸಂಶಯ ಬೇಡ ಎಂದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ರವರು ಮಾತನಾಡಿ, ದೇಶದ ಭದ್ರತೆಗಾಗಿ, ಮುಂದಿನ ಪೀಳಿಗೆಗಾಗಿ ನಡೆಯುವ ಚುನಾವಣೆ ಇದಾಗಿದ್ದು, ಬಹಳಷ್ಟು ಪರಿವರ್ತನೆಗಳಿಗೆ ಕಾರಣವಾಗುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರಲ್ಲದೆ ಶಾಸಕನಾಗಲು ನನಗೆ ನೀಡಿದ ಮತಗಳಿಗಿಂತ ಹೆಚ್ಚು ಮತಗಳನ್ನು ಕ್ಯಾ.ಬ್ರಿಜೇಶ್ ಚೌಟರಿಗೆ ನೀಡಿ ಎಂದರು.


ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿರವರು ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ನ ದುರಾಡಳಿತದ ಕಾರಣದಿಂದಾಗಿ ಕೊಲೆಗಳು,ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಜಾತಿ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನ ಕಾಂಗ್ರೆಸ್ ಮಾಡುತ್ತಿದ್ದು, ಕಾರ್ಯಕರ್ತರ ಶಕ್ತಿಯ ಮುಂದೆ ವಿರೋಽಗಳ ಯಾವ ಕುತಂತ್ರವೂ ನಡೆಯುವುದಿಲ್ಲ ಎಂದರು.
ಮಾಜಿ ಶಾಸಕ ಎ.ರುಕ್ಮಯ ಪೂಜಾರಿರವರು ಮಾತನಾಡಿ, ಒಂದು ಜಾತಿ, ಒಂದು ಮತ,ಪಂಥಕ್ಕೆ ನಡೆಯುವ ಚುನಾವಣೆ ಇದಲ್ಲ, ಬದಲಾಗಿ ರಾಷ್ಟ್ರ ಮಟ್ಟದ ಚುನಾವಣೆ ಇದಾಗಿದ್ದು ಮಹತ್ವದ್ದಾಗಿದೆ. ಕಳೆದ 10 ವರ್ಷಗಳಲ್ಲಿ ನರೇಂದ್ರ ಮೋದಿಯವರ ಬಿಜೆಪಿ ಸರಕಾರ ಜನರ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ,ಇದನ್ನು ಅರ್ಥ ಮಾಡಿಕೊಂಡು ಭವಿಷ್ಯದ ನವ ಭಾರತದ ನಿರ್ಮಾಣಕ್ಕೆ ಮತ್ತೆ ಮೋದಿಯವರು ಪ್ರಧಾನಿಯಾಗಬೇಕಾಗಿದೆ ಎಂದರು.


ವೇದಿಕೆಯಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ , ಕೆ.ಪದ್ಮನಾಭ ಕೊಟ್ಟಾರಿ,ಜಿಲ್ಲಾ ಕಾರ್ಯದರ್ಶಿ ಕಿಶೋರ್ ಕುಮಾರ್ ಬೊಟ್ಯಾಡಿ, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಚುನಾವಣಾ ಪ್ರಭಾರಿಗಳಾದ ಜಗದೀಶ ಶೇಣವ, ಪೂಜಾ ಪೈ, ಮಂಗಳೂರು ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ,ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಅಕ್ಚಿತ್ ಸುವರ್ಣ, ಬಿಜೆಪಿ ಯುವಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಮೊದಲಾದವರು ಉಪಸ್ಥಿತರಿದ್ದರು.


ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್ ಕೋಟ್ಯಾನ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ವಂದಿಸಿದರು. ಡೊಂಬಯ್ಯ ಅರಳ ಕಾರ್ಯಕ್ರಮ ನಿರೂಪಿಸಿದರು. ವಿಟ್ಲ, ಮಾಣಿ ಸಹಿತ ಬಂಟ್ವಾಳ ತಾ| ಬಿಜೆಪಿ ಕಾರ್ಯಕರ್ತರು, ಮುಖಂಡರೂ ಭಾಗವಹಿಸಿದ್ದರು.


ಬಿಜೆಪಿಗೆ ಸೇರ್ಪಡೆ:
ಮಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯೆ ಕವಿತಾಸನಿಲ್ ಹಾಗೂ ಬಂಟ್ವಾಳ ಪುರಸಭಾ ಕಾಂಗ್ರೆಸ್ ಸದಸ್ಯ ಗಂಗಾಧರ್ ಪೂಜಾರಿರವರು ಬಿಜೆಪಿಗೆ ಸೇರ್ಪಡೆಯಾದರು. ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

LEAVE A REPLY

Please enter your comment!
Please enter your name here