![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆ: ಡಾ. ಬಿ. ಕೆ. ರವೀಂದ್ರ
![](https://puttur.suddinews.com/wp-content/uploads/2024/06/03b957fd-bedd-4bce-857d-d23a16ea91da.jpg)
ಪುತ್ತೂರು: ಇತ್ತಿಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ. ಯೋಗವು ದೇಹ, ಮನಸ್ಸು ಮತ್ತು ಭಾವನೆಗಳನ್ನು ಸಮತೋಲನಗೊಳಿಸುವ ಸಮಗ್ರ ಅಭ್ಯಾಸವಾಗಿದೆ ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ. ರವೀಂದ್ರ ಹೇಳಿದರು.
![](https://puttur.suddinews.com/wp-content/uploads/2024/06/5d59d07b-06de-48ba-95a2-1add3cf1df27.jpg)
ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕ್ರೀಡಾ ಸಮಿತಿ ವತಿಯಿಂದ ನಡೆಸಲಾದ ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಯೋಗವು ಪ್ರಾಚೀನ ಕಾಲದಿಂದಲೂ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳ ಅವಿಭಾಜ್ಯ ಅಂಗವಾಗಿದೆ. ಅದರ ಪ್ರಾಮುಖ್ಯತೆಯನ್ನು ನಮ್ಮ ಧರ್ಮಗ್ರಂಥಗಳಲ್ಲಿ ಉತ್ತಮವಾಗಿ ದಾಖಲಿಸಲಾಗಿದೆ ಮತ್ತು ಈಗ ವಿಶ್ವಾದ್ಯಂತ ಗುರುತಿಸಲ್ಪಟ್ಟಿದೆ ಎಂದು ಹೇಳಿದರು.
![](https://puttur.suddinews.com/wp-content/uploads/2024/06/53c9de68-70d5-4e18-94e4-df47c6a52ca2-1.jpg)
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಂಗ್ಲ ಭಾಷಾ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸಂಧ್ಯಾ ಪಿ. ಎಂ. ಮಾತನಾಡಿ, ಯೋಗ ವಿಜ್ಞಾನವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೊ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯವು ಮನುಷ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ ಎಂದರು. ವೇದಿಕೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸಂಗೀತಾ ಎಸ್. ಎಂ., ಕಾರ್ಯಕ್ರಮದ ಸಂಯೋಜಕರಾದ ಕ್ರೀಡಾ ವಿಭಾಗದ ದೈಹಿಕ ಶಿಕ್ಷಣ ನಿರ್ದೇಶಕರಾದ ನವೀನ್ ಕುಮಾರ್ ಎಂ. ಕೆ., ಎನ್. ಎಸ್. ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಲಕ್ಷ್ಮೀಕಾಂತ ರೈ ಅನಿಕೂಟೇಲ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಸುಮಾರು ಮೂರು ಗಂಟೆಗಳ ಕಾಲ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ಶ್ರೀಮತಿ ಸಂಧ್ಯಾ ಪಿ. ಎಂ. ನಡೆಸಿಕೊಟ್ಟರು. ವಿದ್ಯಾರ್ಥಿನಿ ಭೂಮಿಕಾ ಬಿ. ಬಿ. ಸ್ವಾಗತಿಸಿ, ವಿದ್ಯಾರ್ಥಿ ಧನಿಷ್ ವಂದಿಸಿದರು. ವಿದ್ಯಾರ್ಥಿ ಸೂರ್ಯ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.