ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ-ಅಪರಾಧಿ ನಿತೇಶ್‌ಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

0

ಯುವತಿಗೆ ಬೆದರಿಕೆ, ನಿಂದನೆ-ನಿತೇಶ್ ತಂದೆ, ಬಾವನಿಗೆ 5 ವರ್ಷ ಕಠಿಣ ಶಿಕ್ಷೆ
6ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನಾಯಾಲಯ ಆರೋಪ

ಮಂಗಳೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ ವಂಚಿಸಿರುವ ಕಬಕ ನಿವಾಸಿ ಆರೋಪಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದು ಯುವತಿಗೆ ಬೆದರಿಕೆ ಹಾಕಿದ್ದ ಆತನ ತಂದೆ ಮತ್ತು ಬಾವನಿಗೆ 5 ವರ್ಷಗಳ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಕಬಕ ನಿವಾಸಿ ನಿತೇಶ್ ಪೂಜಾರಿ(30ವ.) ಮತ್ತು ಆತನ ತಂದೆ ರಾಮಣ್ಣ ಪೂಜಾರಿಂದ ಮತ್ತು ಬಾವ ನಿಖಿತಾಶ್ ಸುವರ್ಣ (40ವ.)ಶಿಕ್ಷೆ ವಿಧಿಸಲ್ಪಟ್ಟವರು.

ಪ್ರಕರಣದ ವಿವರ:
ಯುವತಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಸುತ್ತಾಡಿಸಿದ್ದ ನಿತೇಶ್ ಬಳಿಕ ಆಕೆಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಅಲ್ಲದೆ ಆಕೆಯ ಮನೆಗೂ ಹೋಗಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದ. ಆ ಬಳಿಕ ಯುವತಿ ಮದುವೆಯಾಗಲು ಕೇಳಿಕೊಂಡಾಗ ನಿರಾಕರಿಸಿದ್ದ. ಪರಸ್ಪರ ಜಾತಿ ಬೇರೆಯಾಗಿರುವುದರಿಂದ ತಂದೆ ಮತ್ತು ಬಾವ ಮದುವೆಗೆ ಒಪ್ಪುತ್ತಿಲ್ಲ ಎಂದು ಹೇಳಿದ್ದ.ಸಂತ್ರಸ್ತ ಯುವತಿ ಬಳಿಕ ನಿತೇಶ್‌ ನ ತಂದೆ ರಾಮಣ್ಣ ಪೂಜಾರಿ ಮತ್ತು ಬಾವ ನಿಖಿತಾಶ್ ಸುವರ್ಣ ಅವರ ಬಳಿ ಕೇಳಿಕೊಂಡಾಗ ಅವರು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ನೊಂದ ಯುವತಿ 2019ರಲ್ಲಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದರು.ಆಗಿನ ಇನ್ಸ್‌ಪೆಕ್ಟ‌ರ್ ತಿಮ್ಮಪ್ಪ ನಾಯಕ್ ಅವರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ಎಸ್.ವಿ ಅವರು ಆರೋಪಿ ನಿತೇಶ್ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಅಪರಾಧಿಗೆ ಭಾರತೀಯ ದಂಡಸಂಹಿತೆಯ ಕಲಂ 376 (2) (ಎನ್) ಅಡಿಯಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10,000 ರೂ. ದಂಡ, ಕಲಂ 417ರ ಅಡಿಯಲ್ಲಿನ ಅಪರಾಧಕ್ಕೆ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿ ಆ.30ರಂದು ತೀರ್ಪು ನೀಡಿದ್ದಾರೆ.

ಯುವತಿಗೆ ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆಯೊಡ್ಡಿರುವ ಆರೋಪದಲ್ಲಿ ನಿತೇಶ್ ತಂದೆ ರಾಮಣ್ಣ ಪೂಜಾರಿ ಮತ್ತು ಬಾವ ನಿಖಿತಾಶ್‌ ಸುವರ್ಣರಿಗೆ ಭಾರತೀಯ ದಂಡ ಸಂಹಿತೆಯ ಕಲಂ 504ರಡಿ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5,000 ರೂ. ದಂಡ ಹಾಗೂ ಕಲಂ 506ರಡಿ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಯುವತಿಗೆ ಪರಿಹಾರ:
ನೊಂದ ಯುವತಿಗೆ ಪರಿಹಾರ ನೀಡುವಂತೆ ನ್ಯಾಯಾಧೀಶರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಕೆಲವು ಸಾಕ್ಷಿಗಳ ವಿಚಾರಣೆಯನ್ನು ಸರಕಾರಿ ಅಭಿಯೋಜಕ ಬಿ.ಶೇಖರ ಶೆಟ್ಟಿ ಅವರು ನಡೆಸಿದ್ದರು.ಅನಂತರ ಸರಕಾರಿ ಅಭಿಯೋಜಕ ಚೌಧರಿ ಮೋತಿಲಾಲ್ ಅವರು ಉಳಿದ ಸಾಕ್ಷಿಗಳ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು. ಒಟ್ಟು 16 ಮಂದಿ ಸಾಕ್ಷಿದಾರರನ್ನು ವಿಚಾರಣೆ ಮಾಡಲಾಗಿತ್ತು. 88 ದಾಖಲೆಗಳನ್ನು ಗುರುತಿಸಲಾಗಿತ್ತು.

LEAVE A REPLY

Please enter your comment!
Please enter your name here