ಬೆಂಗಳೂರು:ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024-25ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರ, ಶ್ರೀ ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ,ಗಾನಯೋಗಿ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ 19 ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳನ್ನು ಘೋಷಿಸಿದೆ.ಸಾಹಿತ್ಯ ಮತ್ತು ನಾಟಕ ವಿಭಾಗದಲ್ಲಿ ಸಂಶೋಧಕ, ಅನುವಾದಕ,ವಿಮರ್ಶಕರೂ ಆಗಿರುವ ವಿಶ್ರಾಂತ ಕುಲಪತಿ ಡಾ|ಬಿ.ಎ.ವಿವೇಕ್ ರೈಯವರು ‘ಪಂಪ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.ಪ್ರಶಸ್ತಿಯು 5 ಲಕ್ಷ ರೂ.ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.
ಕಳೆದ ಆರು ದಶಕಗಳಿಂದ ಅಧ್ಯಯನ,ಅಧ್ಯಾಪನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಇವರು ಕನ್ನಡ ಹಾಗೂ ತುಳು ಭಾಷೆಯ ಅಭಿವೃದ್ಧಿಗಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ.ಮೈಸೂರು ವಿಶ್ವವಿದ್ಯಾಲಯದ ಮಂಗಳೂರು ಸ್ನಾತಕೋತ್ತರ ಕೇಂದ್ರ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆ ವಿಭಾಗದಲ್ಲಿ ಉಪನ್ಯಾಸಕ, ರೀಡರ್,ಪ್ರಾಧ್ಯಾಪಕ ಹಾಗೂ ವಿಭಾಗ ಮುಖ್ಯಸ್ಥರಾಗಿ 34 ವರ್ಷ ಅಧ್ಯಾಪನ ಹಾಗೂ ಸಂಶೋಧನಾ ವೃತ್ತಿಗಳಲ್ಲಿ ತೊಡಗಿಸಿಕೊಂಡಿದ್ದ ವಿವೇಕ್ ರೈಯವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾಗಿ,ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳಾಗಿ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸ್ಥಾಪಕ ಅಧ್ಯಕ್ಷರಾಗಿ, ಜರ್ಮನಿಯ ವ್ಯೂಕ್ ಬುರ್ಗ್ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿ ಸಮಿತಿ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ಸಾಂಸ್ಕೃತಿಕ,ಕಲಾ ಅಭಿವೃದ್ಧಿಗಾಗಿ ಕೊಡುಗೆ ನೀಡಿದ್ದಾರೆ.27ಕ್ಕಿಂತಲೂ ಹೆಚ್ಚು ಕೃತಿಗಳು, 5 ಇಂಗ್ಲಿಷ್ ಗ್ರಂಥಗಳು, ಅನುವಾದ ಗ್ರಂಥಗಳು, ಸಂಪಾದನೆ ಗ್ರಂಥಗಳು,ವಿದೇಶ ಪ್ರವಾಸ ಕಥನಗಳು,ಬ್ಲಾಗ್ ಬರಹಗಳು,ಅಂಕಣಗಳು ಸೇರಿ ಅಕ್ಷರಮುದ್ರೆಯ ಸಾಂಸ್ಕೃತಿಕ ಹಾಗೂ ಜನಪದ ಕ್ಷೇತ್ರಕ್ಕೆ ಸ್ಮರಣೀಯ ಕೊಡುಗೆ ನೀಡಿದ್ದಾರೆ.
ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ಸಾಹಿತ್ಯ ಅಕಾಡೆಮಿ, ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ,ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರಶಸ್ತಿ ಸೇರಿದಂತೆ ೨೦ಕ್ಕೂ ಹೆಚ್ಚು ಪ್ರತಿಷ್ಠಿತ ಪ್ರಶಸ್ತಿಗಳು ಅವರ ಮಡಿಲನ್ನು ಸೇರಿದೆ.ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ಸಮ್ಮೇಳನ, ಕರ್ನಾಟಕ ಜಾನಪದ ಸಮ್ಮೇಳನ, ಕರ್ನಾಟಕ ಸಂಸ್ಕೃತಿ ಸಮ್ಮೇಳನ,ಕರ್ನಾಟಕ ದೇಸಿ ಸಮ್ಮೇಳನ ಹಾಗೂ ಕುವೈಟ್ ತುಳು ಸಮ್ಮೇಳನ ಸೇರಿದಂತೆ ಅನೇಕ ಸಮ್ಮೇಳನಗಳ ಅಧ್ಯಕ್ಷತೆ ವಹಿಸಿದ್ದಾರೆ.ಪುಣಚ ಗ್ರಾಮದ ಅಗ್ರಾಳ ನಿವಾಸಿಯಾಗಿರುವ ವಿವೇಕ್ ರೈಯವರು ಪ್ರಸ್ತುತ ಮಂಗಳೂರು ನಿವಾಸಿಯಾಗಿದ್ದಾರೆ.