ಪುತ್ತೂರು:ಪುತ್ತೂರಿನ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ರಾಜ್ಯದಲ್ಲೇ ಪ್ರಥಮವಾಗಿ ಬೃಹತ್ ಕಮರ್ಷಿಯಲ್ ಕಾಂಪ್ಲೆಕ್ಸ್ ತಲೆ ಎತ್ತಲಿದೆ. ಶಾಸಕ ಅಶೋಕ್ ರೈ ಕನಸಿನ ಯೋಜನೆಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಸಮ್ಮತಿ ಸೂಚಿಸಿದ್ದಾರೆ.
ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಶಾಸಕ ಅಶೋಕ್ ರೈ ಅವರು, ಪುತ್ತೂರು ಬಸ್ ನಿಲ್ದಾಣದ ಬಳಿ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗವಿದ್ದು ಅದು ಬಹಳ ವರ್ಷದಿಂದ ಹಾಗೇ ಉಳಿದುಕೊಂಡಿದೆ. ಇದರಲ್ಲಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಿರ್ಮಾಣವಾದಲ್ಲಿ ಇಲಾಖೆಗೂ ಹಣಕಾಸಿನ ನೆರವು ಆಗಲಿದ್ದು ,ಸರಕಾರಕ್ಕೂ ಪ್ರಯೋಜನವಿದೆ.ಬಸ್ ನಿಲ್ದಾಣಕ್ಕೆ ತಾಗಿಕೊಂಡೇ ಇರುವ ಕಾರಣ ಇದು ನಿರ್ಮಾಣವಾದಲ್ಲಿ ಬಹಳ ಉಪಯುಕ್ತವಾಗಲಿದೆ ಎಂದು ಸಚಿವರ ಗಮನಕ್ಕೆ ತಂದರು.
ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವಂತೆ ಇಲಾಖೆ ಇಂಜಿನಿಯರ್ ಗೆ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು.