ಏಕಬಿಲ್ವಂ ಶಿವಾರ್ಪಣಂ, ಶತರುದ್ರಾಭಿಷೇಕ, ರುದ್ರಯಾಗ
- ವಿವಿಧ ಭಜನಾ ತಂಡಗಳಿಂದ ದೇವಳದಲ್ಲಿ ನಿರಂತರ ಭಜನೆ
- ಬೆಳಗ್ಗಿನಿಂದ ರಾತ್ರಿಯ ತನಕ ನಟರಾಜ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.26ರಂದು ಮಹಾಶಿವರಾತ್ರಿ ಉತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ತಿಳಿಸಿದ್ದಾರೆ.
ಬೆಳಗ್ಗೆ ಗಂಟೆ 6 ರಿಂದ ಮಾರನೆ ದಿನ ಬೆಳಗ್ಗೆ ಗಂಟೆ 6ರ ತನಕ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ದೇವಳದ ನಟರಾಜ ವೇದಿಕೆಯಲ್ಲಿ ಬೆಳಿಗ್ಗೆ ಗಂಟೆ 9 ರಿಂದ ರಾತ್ರಿ ಗಂಟೆ 9ರ ತನಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಬೆಳಿಗ್ಗೆ ದೇವಳದಲ್ಲಿ ಏಕಬಿಲ್ವಂ ಶಿವಾರ್ಪಣಂ ಕಾರ್ಯಕ್ರಮ ಭಕ್ತರಿಗೆ ಅವಕಾಶವಿದೆ. ಬೆಳಿಗ್ಗೆ 9ಕ್ಕೆ ಶತರುದ್ರಾಭಿಷೇಕ ಹಾಗು ರುದ್ರಯಾಗ ಆರಂಭಗೊಂಡು 11.30ಕ್ಕೆ ಪೂರ್ಣಾಹುತಿ ನಡೆಯಲಿದೆ. ಮಧ್ಯಾಹ್ನ ಗಂಟೆ 12ಕ್ಕೆ ಮಹಾಮಂಗಳಾರತಿ ನಂತರ ಸಾರ್ವಜನಿಕ ಅನ್ನಸಂಪರ್ತಣೆ ನಡೆಯಲಿದೆ. ರಾತ್ರಿ ಗಂಟೆ 7 ರ ನಂತರ ಶ್ರೀ ದೇವರ ಬಲಿ ಉತ್ಸವ ನಡೆಯಲಿದೆ. ಹೋರಾಂಗಣದಲ್ಲಿ ಉಡುಕೆ ಸುತ್ತು, ಚೆಂಡೆ ಸುತ್ತಿನ ಬಳಿಕ ಕಂಡನಾಯಕನ ಕಟ್ಟೆಯಲ್ಲಿ ಕಟ್ಟೆಪೂಜೆ ನಡೆಯಲಿದೆ. ಇದೆ ಸಂದರ್ಭ ಅಷ್ಟಾವಧಾನ ಸೇವೆ, ಪಲ್ಲಕ್ಕಿ ಉತ್ಸವ, ಸ್ಯಾಕ್ಸೋಪೋನ್ ವಾದನ, ಬ್ಯಾಂಡ್, ಭಜನೆ ಸುತ್ತು ನಡೆದು ಚಂದ್ರಮಂಡಲ ರಥೋತ್ಸವ ಜರುಗಲಿದೆ. ಬಳಿಕ ಕೆರೆ ಉತ್ಸವ ನಡೆದು ದೇವರು ಒಳಗಾದ ಬಳಿಕ ದೇವರಿಗೆ ಏಕಾದಶರುದ್ರಾಭಿಷೇಕ, ರಾತ್ರಿ ಪೂಜೆ, ನಡೆದು ದೇವರ ಭೂತಬಲಿ ಉತ್ಸವ ನಡೆಯಲಿದೆ ಎಂದವರು ತಿಳಿಸಿದ್ದಾರೆ.
ಮಹಾಶಿವರಾತ್ರಿ ದಿನ ನಡೆಯುವ ಅನ್ನಸಂತರ್ಪಣೆ, ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಾಲಂಕಾರ ಸೇವೆ ಮಾಡಲು ಭಕ್ತರಿಗೆ ಅವಕಾಶವಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.