ಕಾಪಿನಬಾಗಿಲು: ಬೈಕ್ ಡಿಕ್ಕಿ-ಗಾಯಾಳು ಪಾದಚಾರಿ ಆಸ್ಪತ್ರೆಯಲ್ಲಿ ಮೃತ್ಯು

0

ನೆಲ್ಯಾಡಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ ಸಾಬುಮೋನು ಕೆ.ಇ.(53ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಮಾ.16ರಂದು ಸಂಜೆ ಕೊಕ್ಕಡ ಪೇಟೆಗೆ ಬಂದವರು ಮನೆಗೆ ಬೇಕಾದ ಸಾಮಾಗ್ರಿಗಳನ್ನು ಖರೀದಿಸಿ ಮತ್ತೆ ಮನೆ ಕಡೆಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದವರು ರಾತ್ರಿ 8.30ರ ವೇಳೆಗೆ ಕಾಪಿನಬಾಗಿಲು ಎಂಬಲ್ಲಿಗೆ ತಲುಪುತ್ತಿದ್ದಂತೆ ಕೊಕ್ಕಡ ಕಡೆಯಿಂದ ಮಹೇಶ್ ಎಂಬವರು ಚಲಾಯಿಸಿಕೊಂಡು ಬಂದ ಬೈಕ್(ಕೆಎ 19, ಹೆಚ್.ಎ-7155) ಡಿಕ್ಕಿಯಾಗಿದೆ. ಘಟನೆಯಲ್ಲಿ ರಸ್ತೆಗೆ ಬಿದ್ದ ಸಾಬುಮೋನು ಅವರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರು ಅವರನ್ನು ಉಪಚರಿಸಿ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಮಾ.17ರಂದು ರಾತ್ರಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರು, ತಂದೆ, ತಾಯಿಯನ್ನು ಅಗಲಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

LEAVE A REPLY

Please enter your comment!
Please enter your name here