ವಿಟ್ಲ: ಪರವಾನಿಗೆ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಪಿಕ್ ಅಪ್ ವಾಹನವನ್ನು ಖಚಿತ ಮಾಹಿತಿಯಂತೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಮಾ.22ರ ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿ ವಾಹನ ಚಾಲಕ ಅನ್ವರ್ ಸಾದತ್ ಅಮ್ಟೂರು ಅವರ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

ಬಂಟ್ವಾಳ ತಾಲೂಕು ವಿಟ್ಲಪಡೂರು ಗ್ರಾಮದ ಕಡಂಬು ಎಂಬಲ್ಲಿ ಪುತ್ತೂರು ಕಡೆಯಿಂದ ಮರದ ದಿಮ್ಮಿಗಳನ್ನು ತುಂಬಿಸಿಕೊಂಡು ಕೇರಳಕ್ಕೆ ಸಾಗಾಟ ಮಾಡುವ ವೇಳೆ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆ ಹಚ್ಚಿ ಕೇಸು ದಾಖಲಿಸಿಕೊಂಡಿದ್ದಾರೆ. ಸೊತ್ತು ಮತ್ತು ವಾಹನದ ಒಟ್ಟು ಮೌಲ್ಯ 3.50 ಲಕ್ಷ ಎಂದು ಅಂದಾಜಿಸಲಾಗಿದೆ.
ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ್ ಖಣದಾಳೆ ನೇತೃತ್ವದಲ್ಲಿ ಪ್ರಭಾರ ವಲಯ ಅರಣ್ಯಾಧಿಕಾರಿ ಪ್ರಶಾಂತ ಪೂಜಾರಿ, ಉಪ ವಲಯ ಅರಣ್ಯಾಧಿಕಾರಿ ವಿನಯ ಕುಮಾರ್, ಶಿವಾನಂದ ಮಾಧರ, ವಾಹನ ಚಾಲಕ ಜಯಪ್ರಕಾಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.