ಪುತ್ತೂರು: ಉಪ್ಪಿನಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಸ್ಪರ್ಧಿಗಳ ವಿರುದ್ಧ ಸ್ಪರ್ಧಿಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಆರೋಪಿಸಿ ಉಪ್ಪಿನಂಗಡಿ ಪ್ರಾ.ಕೃ.ಪ.ಸ. ಸಂಘದ ಮಾಜಿ ಅಧ್ಯಕ್ಷ ಇಳಂತಿಲದ ಕೆ. ವಿ. ಪ್ರಸಾದ್ರನ್ನು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಮುಂದಿನ 6 ವರ್ಷಗಳ ಕಾಲ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ಇವರನ್ನು ವಜಾಗೊಳಿಸಿ ಬೆಳ್ತಂಗಡಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಎಮ್. ಪ್ರಶಾಂತ್ ಪಾರೆಂಕಿ ಆದೇಶಿಸಿದ್ದಾರೆ.
ಈ ಹಿಂದಿನ ಅವಧಿಯಲ್ಲಿ ಉಪ್ಪಿನಂಗಡಿ ಪ್ರಾ.ಕೃ.ಪ.ಸಹಕಾರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಕೆ.ವಿ.ಪ್ರಸಾದ್ ಅವರಿಗೆ, ಸಹಕಾರ ಸಂಘದ ನೂತನ ಆಡಳಿತ ಮಂಡಳಿಗೆ ನಡೆದ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ದೊರೆಯದೇ ಇದ್ದುದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತರಾಗಿದ್ದರು.