ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ಇದರಿಂದ ಕೊಡಮಾಡಲ್ಪಡುವ ’ಸ್ವರ್ಣ ಸಾಧನಾ’ ಪ್ರಶಸ್ತಿಗೆ ಯಕ್ಷಗಾನ ಅರ್ಥಧಾರಿ, ಸಂಶೋಧಕ, ಸಂಸ್ಕೃತಿ ಚಿಂತಕ, ನಿವೃತ್ತ ಪ್ರಾಚಾರ್ಯ ಡಾ. ಎಂ. ಪ್ರಭಾಕರ ಜೋಶಿಯವರನ್ನು ಆಯ್ಕೆ ಮಾಡಲಾಗಿದೆ.
ಕಳೆದ 3 ವರ್ಷಗಳಿಂದ ನಿವೃತ್ತ ನೌಕರರ ಸಂಘದ ಸ್ವರ್ಣ ಮಹೋತ್ಸವದ ಸವಿನೆನಪಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದ ಜಿಲ್ಲೆಯ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
2022ರಲ್ಲಿ ಪ್ರಥಮವಾಗಿ ಕೃಷಿ ಮತ್ತು ನೀರಾವರಿ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ. 2023ರಲ್ಲಿ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಸಾಧಕ ಡಾ. ಎಂ. ಮೋಹನ್ ಆಳ್ವ, 2024ರಲ್ಲಿ ಸಾಹಿತ್ಯ ಕ್ಷೇತ್ರದ ಸಾಧಕರಾದ ಸುಬ್ರಾಯ ಚೊಕ್ಕಾಡಿಯವರಿಗೆ ನೀಡಲಾಗಿದೆ. ಡಾ. ಪ್ರಭಾಕರ ಜೋಶಿಯವರು ಶಿಕ್ಷಣ, ಯಕ್ಷಗಾನ, ಅರ್ಥಶಾಸ್ತ್ರ, ವಾಣಿಜ್ಯಶಾಸ್ತ್ರ, ಸಾಹಿತ್ಯ, ಸಂಸ್ಕೃತಿ ಮುಂತಾದ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಬಹುಭಾಷಾ ಪಂಡಿತರು. 20ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ ಇವರು ಅಷ್ಟೇ ಕೃತಿಗಳನ್ನು ಸಂಪಾದಿಸಿದ್ದಾರೆ. 50ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಇವರ ಈ ಸಾಧನೆಯನ್ನು ಗುರುತಿಸಿ ’ಸ್ವರ್ಣ ಸಾಧನಾ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯನ್ನು ಮೇ.1ರಂದು ’ಜೈನ ಭವನ ಸಭಾಂಗಣ’ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸಂಘದ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.