’ನೆಲ್ಯಾಡಿ ಪೇಟೆಯಲ್ಲಿ ಹೆಚ್ಚುವರಿಯಾಗಿ ಮೂರು ಅಂಡರ್‌ಪಾಸ್’- ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭರವಸೆ

0

ನೆಲ್ಯಾಡಿ: ನೆಲ್ಯಾಡಿ ಪೇಟೆಯಲ್ಲಿ ಹೆಚ್ಚುವರಿಯಾಗಿ ಮೂರು ಅಂಡರ್‌ಪಾಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಗೆ ದ.ಕ.ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಭರವಸೆ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆಯಿಂದ ಬಿ.ಸಿ.ರೋಡ್ ತನಕ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ನೆಲ್ಯಾಡಿ ಪೇಟೆಯಲ್ಲಿ ಎರಡು ಬದಿ ಸರ್ವೀಸ್ ರಸ್ತೆಯ ಪಕ್ಕ ತಡೆಗೋಡೆ ನಿರ್ಮಿಸಿ ಎತ್ತರಿಸಿದ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಈ ರೀತಿ ರಸ್ತೆ ನಿರ್ಮಾಣ ಮಾಡುತ್ತಿರುವುದರಿಂದ ನೆಲ್ಯಾಡಿ ಪೇಟೆ ಇಬ್ಭಾಗವಾಗಲಿದೆ. ಇದರಿಂದ ವರ್ತಕರಿಗೆ, ಸಾರ್ವಜನಿಕರಿಗೆ ತೀರಾ ತೊಂದರೆಯಾಗಲಿದೆ. ಆದ್ದರಿಂದ ನೆಲ್ಯಾಡಿ ಪೇಟೆಯಲ್ಲಿ ಕಲ್ಲಡ್ಕ ಮಾದರಿಯಲ್ಲಿಯೇ ಮೇಲ್ಸೇತುವೆ ಹೆದ್ದಾರಿ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವುದರಿಂದ ನೆಲ್ಯಾಡಿ ಪೇಟೆಯಲ್ಲಿನ ಕಾಮಗಾರಿ ಅರ್ಧಕ್ಕೆ ಮೊಟಕುಗೊಂಡಿದೆ. ಈ ಮಧ್ಯೆ ನೆಲ್ಯಾಡಿ ಪೇಟೆಯಲ್ಲಿ ಮೇಲ್ಸೇತುವೆ ಹೆದ್ದಾರಿ ನಿರ್ಮಾಣಕ್ಕಾಗಿ ಸಂಸದರ ಸಹಿತ ರಾಜ್ಯ, ಕೇಂದ್ರ ಸರಕಾರಗಳಿಗೆ ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಎ.15ರಂದು ನೆಲ್ಯಾಡಿಗೆ ಆಗಮಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರೊಂದಿಗೆ ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಯವರು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸಭೆ ಸೇರಿ ಚರ್ಚೆ ನಡೆಸಿ ನೆಲ್ಯಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ವೇಳೆ ಹೋರಾಟ ಸಮಿತಿಯವರೊಂದಿಗೆ ಮಾತನಾಡಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು, ನೆಲ್ಯಾಡಿ ಪೇಟೆಯಲ್ಲಿ ಈಗಾಗಲೇ ಎರಡು ಅಂಡರ್‌ಪಾಸ್ ಮಾಡಲಾಗಿದೆ. ಹೆದ್ದಾರಿ ನಿರ್ಮಾಣ ಕಾಮಗಾರಿಯೂ ಅರ್ಧದಷ್ಟು ಮುಗಿದಿದೆ. ಪೇಟೆಯಲ್ಲಿ ಹೆಚ್ಚುವರಿಯಾಗಿ ಮತ್ತೆ ಮೂರು ಅಂಡರ್‌ಪಾಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ, ಶೀಘ್ರದಲ್ಲೇ ಕಾಮಗಾರಿ ನಡೆಸುವುದಾಗಿಯೂ ಹೇಳಿದರು ಎಂದು ವರದಿಯಾಗಿದೆ.

ಸಭೆಯಲ್ಲಿ ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಎ.ಕೆ.ವರ್ಗೀಸ್, ನೆಲ್ಯಾಡಿ-ಕೌಕ್ರಾಡಿ ವರ್ತಕ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್.ದುರ್ಗಾಶ್ರೀ, ಪದಾಧಿಕಾರಿಗಳಾದ ಸರ್ವೋತ್ತಮ ಗೌಡ, ಪಿ.ಪಿ.ವರ್ಗೀಸ್, ಉಷಾ ಅಂಚನ್, ನಾಝೀಂ ಸಾಹೇಬ್, ಕೆ.ಪಿ.ತೋಮಸ್, ಕೆ.ಎಂ.ಹನೀಫ್, ಗಣೇಶ್ ರಶ್ಮಿ, ರವಿ ಸುರಕ್ಷಾ, ರಾಮಣ್ಣ ಟೈಲರ್, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್.ಗೌಡ ಇಚ್ಲಂಪಾಡಿ, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಕೌಕ್ರಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಎಂ.ಕೆ.ಇಬ್ರಾಹಿಂ ಮತ್ತಿತರರು ಉಪಸ್ಥಿತರಿದ್ದರು.

ಅಂಗಡಿ-ಮುಂಗಟ್ಟು ಬಂದ್;
ನೆಲ್ಯಾಡಿ ಪೇಟೆಯಲ್ಲಿ ಮೇಲ್ಸೇತುವೆ ಹೆದ್ದಾರಿ ನಿರ್ಮಾಣಕ್ಕೆ ಒತ್ತಾಯಿಸಿ ನೆಲ್ಯಾಡಿ ಪೇಟೆಯ ವರ್ತಕರು ಎ.15ರಂದು ಮಧ್ಯಾಹ್ನದ ತನಕ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ್ದರು.

ಮೇಲ್ಸೇತುವೆ ಬದಲು ಅಂಡರ್‌ಪಾಸ್;
ನೆಲ್ಯಾಡಿಗೆ ಆಗಮಿಸಿದ ದ.ಕ.ಲೋಕಸಭಾ ಕ್ಷೇತ್ರದ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ನೆಲ್ಯಾಡಿ ಪೇಟೆಯಲ್ಲಿ ಮೇಲ್ಸೇತುವೆಗೆ ಬದಲಾಗಿ ಹೆಚ್ಚುವರಿಯಾಗಿ ಮೂರು ಅಂಡರ್ ಪಾಸ್‌ಗಳನ್ನು ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಎ.ಕೆ.ವರ್ಗೀಸ್, ಅಧ್ಯಕ್ಷರು
ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿ

ಪ್ರತಿಕ್ರಿಯೆಗೆ ಸಂಸದರ ನಕಾರ:
ನೆಲ್ಯಾಡಿ-ಕೌಕ್ರಾಡಿ ಹೋರಾಟ ಸಮಿತಿಯವರೊಂದಿಗಿನ ಸಭೆಯ ಬಳಿಕ ಸಂಸದರು ನೆಲ್ಯಾಡಿ ಗ್ರಾ.ಪಂ.ನ ಗ್ರಾಮ ಸೌಧ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ್ದು ಈ ವೇಳೆ ಮಾಣಿ-ಸಂಪಾಜೆ ಚತುಷ್ಪಥ ರಸ್ತೆ ನಿರ್ಮಾಣ, ಪೆರಿಯಶಾಂತಿ-ಸುಬ್ರಹ್ಮಣ್ಯ-ಪೈಚಾರು ಲಿಂಕ್ ರಸ್ತೆ ನಿರ್ಮಾಣದ ವಿಚಾರ ಪ್ರಸ್ತಾಪಿಸಿದರೂ ನೆಲ್ಯಾಡಿ ಪೇಟೆಯಲ್ಲಿ ಅಂಡರ್‌ಪಾಸ್ ನಿರ್ಮಾಣದ ಕುರಿತು ಯಾವುದೇ ಪ್ರಸ್ತಾಪ ಮಾಡದಿರುವುದು ನೆಲ್ಯಾಡಿಯ ವರ್ತಕರಲ್ಲಿ ಬೇಸರ ತಂದಿದೆ. ಸಂಸದರು ಸಭೆಯಿಂದ ನಿರ್ಗಮನದ ವೇಳೆ ನೆಲ್ಯಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣದ ಕುರಿತು ಪತ್ರಕರ್ತರು ಪ್ರಶ್ನಿಸಿದರೂ ಪ್ರತಿಕ್ರಿಯೆ ನೀಡಲು ಸಂಸದರು ನಿರಾಕರಿಸಿ ತೆರಳಿದರು.

LEAVE A REPLY

Please enter your comment!
Please enter your name here