ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಹತ್ತನೇ ತರಗತಿಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಹತ್ತನೇ ತರಗತಿಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ಐದನೇ ಸ್ಥಾನವನ್ನು ಗಳಿಸಿದ ನಿಹಾಲ್ ಎಂ ಶೆಟ್ಟಿ ಇವರನ್ನು ಪಾಲಕರೊಂದಿಗೆ ಸನ್ಮಾನಿಸಲಾಯಿತು.
ಅತಿಥಿಯಾಗಿದ್ದ ಉಜಿರೆಯ ವಸತಿಯುತ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಟಿ.ಕೃಷ್ಣಮೂರ್ತಿ ಮಾತನಾಡಿ, ಎಷ್ಟೇ ಸಾಧನೆ ಮಾಡಿದರೂ ತಾಯಿ ಬೇರಾದ ತಮ್ಮ ಶಾಲೆಯನ್ನು, ಅಲ್ಲಿನ ಶಿಕ್ಷಕರನ್ನು ಮರೆಯದಿರಿ ಎಂಬ ಹಿತವಚನ ನೀಡಿದರು.
ವಿಶಿಷ್ಟ ಶ್ರೇಣಿ ಹಾಗೂ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಸಾಧಕ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಪಾಲಕರ ಪರವಾಗಿ ಹರೀಶ್ ಶೆಟ್ಟಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯ ಸಂಚಾಲಕರಾದ ಸುಬ್ರಹ್ಮಣ್ಯ ಭಟ್, ವಿದ್ಯಾರ್ಥಿಗಳಾದ ನೀವು ನಿರಂತರ ಅಧ್ಯಯನ ಶೀಲರಾಗಿ ಯಶಸ್ಸನ್ನು ಸಾಧಿಸುವ ಮೂಲಕ ತಮ್ಮ ಗುರಿಯನ್ನು ತಲುಪುವಂತೆ ಶುಭ ಹಾರೈಸಿದರು.
ಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಆರ್. ಪ್ರಸಾದ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಕರುಣಾಕರ ಸುವರ್ಣ, ಆಡಳಿತ ಮಂಡಳಿ ಸದಸ್ಯರು, ಪಾಲಕರು ಮತ್ತು ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಇಂದ್ರಪ್ರಸ್ಥ ವಿದ್ಯಾಲಯದ ಸಹ ಶಿಕ್ಷಕಿಯರಾದ ಶಶಿಕಲಾ ವಂದಿಸಿದರು. ಯಶಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.