ಪುತ್ತೂರು: ವಿಜ್ಞಾನವು ಅಗಾಧವಾದ ಅವಕಾಶಗಳ ಕೀಲಿಕೈ. ವಿಜ್ಞಾನದ ವಿದ್ಯಾರ್ಥಿಗಳಾದ ತಾವು ಈ ಅವಕಾಶಗಳನ್ನು ಬಳಸಿಕೊಂಡು ಜೀವನದಲ್ಲಿ ಯಶಸ್ವಿಯಾಗಬೇಕಾದರೆ ಕಠಿಣ ಪರಿಶ್ರಮವನ್ನು ಪಡೆಯಬೇಕು. ಪ್ರಸ್ತುತ ಪಿಯುಸಿ ತಮ್ಮ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದ್ದು, ತಾವೆಲ್ಲರೂ ಶಿಸ್ತುಬದ್ಧವಾದ ಅಧ್ಯಯನ, ಕಠಿಣ ಪರಿಶ್ರಮದ ಮೂಲಕ ಯಶಸ್ಸನ್ನು ಸಾಧಿಸಬೇಕೆಂದು
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ಇಲ್ಲಿನ ವಿದ್ಯಾರ್ಥಿ ಕ್ಷೇಮ ಪಾಲನಾ ಡೀನ್ ಡಾ .ಪ್ರಶಾಂತ ರಾವ್ ಹೇಳಿದರು.
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ಜೂ.3ರಂದು ಕಾಲೇಜು ಸಭಾಂಗಣದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕುರಿತು ಮಾಹಿತಿ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು.

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ, ರಾಷ್ಟ್ರ ಮಟ್ಟದ ಪರೀಕ್ಷೆಗಳಾದ JEE ಮತ್ತು ನೀಟ್ ಪರೀಕ್ಷೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಹಾಗೆಯೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆಯ ಮಹತ್ವವನ್ನು ತಿಳಿಸಿದರು. ಈ ವರ್ಷ ಪ್ರಥಮ ಪಿಯುಸಿ ಗೆ ಸೇರಿದ ವಿದ್ಯಾರ್ಥಿಗಳು 2027ರಲ್ಲಿ ಈ ಪರೀಕ್ಷೆಗಳನ್ನು ಬರೆಯಬೇಕಾಗಿದ್ದು, ಮುಂದಿನ ಎರಡು ವರ್ಷಗಳ ಕಾಲ ಯಾವ ರೀತಿಯಲ್ಲಿ ಈ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ತಾವು ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ.
ಸಾಕಷ್ಟು ವಿದ್ಯಾರ್ಥಿಗಳಿಗೆ ತಮ್ಮ ಮುಂದೆ ಇರುವ ಅವಕಾಶಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಇರಬಹುದು. ಮುಂದೆ ವಿದ್ಯಾರ್ಥಿಗಳು ಎದುರಿಸಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿಯನ್ನು ತಿಳಿದುಕೊಳ್ಳಲು ಈ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುದಷ್ಟೇ ಅಲ್ಲದೆ ಉತ್ತಮ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳುವುದರ ಮೂಲಕ ಜೀವನದ ಯಶಸ್ಸು ನಿಮಗೆ ಸಿಗಲಿ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಉಪನ್ಯಾಸಕರಾದ ಯಶವಂತ್ ಎಂ ಡಿ ಉಪಸ್ಥಿತರಿದ್ದರು. ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ.ಜಿ, ನಿರಂಜನ್ ಜಿ.ಯು ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿನಿಯರಾದ ಶಮಾ ಸ್ವಾಗತಿಸಿ, ಅಂಜೇಲಿಕಾ ಮೆಲೋನಿ ಪಿಂಟೋ ಅತಿಥಿಗಳ ಪರಿಚಯಿಸಿ, ತ್ರಿಶಾ ರೈ ವಂದಿಸಿದರು. ಪ್ರಾಧಿ ಕ್ಲಾರೆ ಪಿಂಟೋ ಕಾರ್ಯಕ್ರಮವನ್ನು ನಿರೂಪಿಸಿದರು.