ಪುತ್ತೂರು: ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆಯನ್ನು ಮಾಡುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಪರೀಕ್ಷೆಗಳಲ್ಲಿ ಅಂಕಗಳನ್ನು ಪಡೆಯುವುದು ಒಂದು ಅಪೂರ್ವವಾದ ಸಾಧನೆ. ಆದರೆ ಇದರ ಜೊತೆಗೆ ಮೌಲ್ಯಗಳನ್ನು ಅಳವಡಿಸಿಕೊಳ್ಳದಿದ್ದರೆ ನಮ್ಮ ಶಿಕ್ಷಣಕ್ಕೆ ಅರ್ಥವಿರುವುದಿಲ್ಲ. ಹೆತ್ತವರು ಮತ್ತು ಶಿಕ್ಷಕರಿಗೆ ಗೌರವವನ್ನು ಕೊಡುವುದು ಕೂಡ ನಿಮ್ಮೆಲ್ಲರ ಕರ್ತವ್ಯ ಎಂದು ಪುತ್ತೂರು ಸಂತ ಫಿಲೋಮಿನಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ಹೇಳಿದರು.

ಜೂನ್ 6 ರಂದು ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ 2024-25 ರ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ರ್ಯಾಂಕ್ ವಿಜೇತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಿರುವುದು ಸಂತೋಷ ಆದರೆ ಆ ಸಾಧನೆ ಇಲ್ಲಿಗೆ ಸೀಮಿತವಾಗದೆ ನಿರಂತರವಾಗಿರಬೇಕು ವಿಶೇಷ ಸಾಧಕರಾಗಿ ದೇಶಕ್ಕೆ ಕೊಡುಗೆಯಾಗಿ, ಸಮಾಜಕ್ಕೆ ಆಸ್ತಿಯಾಗಿರಿ ಎಂದು ಶುಭಹಾರೈಸಿದರು.
ಮುಖ್ಯ ಅತಿಥಿಗಳಾದ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ ಮಾತನಾಡಿ ವಿದ್ಯಾರ್ಥಿಗಳ ಸಾಧನೆಯ ಹಿಂದೆ ಶಿಕ್ಷಕರ ಹಾಗೂ ತಂದೆ – ತಾಯಿಗಳ ಪಾತ್ರ ಮಹತ್ವದ್ದಾಗಿದ್ದು, ಅವರನ್ನು ಈ ಸಂದರ್ಭದಲ್ಲಿ ನಾವು ಗೌರವಿಸಬೇಕು. ಎಲ್ಲಾ ವಿದ್ಯಾರ್ಥಿಗಳ ಭವಿಷ್ಯವು ಉಜ್ವಲವಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ ಜೀವನದಲ್ಲಿ ಅಸಾಧ್ಯವಾದದ್ದು ಯಾವುದು ಇಲ್ಲ ಇಂದಿನ ಈ ಸಾಧಕರ ಸಾಧನೆಯು ಪ್ರಸ್ತುತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದ್ದು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಅತ್ಯಂತ ಕ್ರಿಯಾಶೀಲರಾಗಿ ತಮ್ಮ ಗುರಿಯನ್ನು ಸಾಧಿಸಬೇಕು ಎಂದು ಶುಭ ಹಾರೈಸಿದರು.
2024 – 25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 9ನೇ ರಾಂಕ್ ಪಡೆದ ಎಂ. ದೀಪಾ ನಾಯಕ್(591), ಅದಿತಿ (591), ಫಿದಾ ಹಲೀಮ (591), ನೀತಿ ಎನ್ ಬಿ( 591),ಆನ್ಸಿನ ರೇಜೀ (591) ಇವರನ್ನು ಸನ್ಮಾನಿಸಲಾಯಿತು ಹಾಗೂ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 159 ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.
ಬಿಹಾರದ ಗಯಾದಲ್ಲಿ ನಡೆದ ಖೇಲೋ ಇಂಡಿಯಾ ಯೂತ್ ಗೇಮ್ಸ್ ರಾಷ್ಟ್ರಮಟ್ಟದ ಟ್ರಡಿಷನಲ್ ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಪಡೆದ ನಿಖಿಲ್ ಬಿ. ಕೆ ಇವರನ್ನು ಸನ್ಮಾನಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು,ಪೋಷಕರು ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.ಪ್ರದರ್ಶನ ಕಲಾಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಯಶವಂತ್ ಎಂ ಡಿ ಸ್ವಾಗತಿಸಿ, ಭರತ್ ಕುಮಾರ್ ವಂದಿಸಿ, ರಾಹುಲ್ ಕಾರ್ಯಕ್ರಮವನ್ನು ನಿರೂಪಿಸಿದರು.