ಪುತ್ತೂರು: ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ 2025-26ನೇ ಸಾಲಿನ ಪೋಷಕರ ಮಹಾಸಭೆಯು ಜೂ.14ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಮಖ್ಯ ಅತಿಥಿಯಾಗಿದ್ದ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಸತೀಶ್ ಭಟ್ ಮಾತನಾಡಿ, ಸಂಸ್ಥೆಯ ಶೈಕ್ಷಣಿಕ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಕ್ಕಳ ಸಾಧನೆಯಲ್ಲಿ ಪೋಷಕರ ಜವಾಬ್ದಾರಿಗಳ ಬಗ್ಗೆ ತಿಳಿಸಿದರು.
ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ ಮಾತನಾಡಿ, ಶೈಕ್ಷಣಿಕ ಸಾಲಿನ ಶಾಲಾ ಕಾರ್ಯಕ್ರಮಗಳ ಬಗ್ಗೆ ತಿಳಿಸಿ ಸಂಸ್ಥೆಯ ಏಳಿಗೆಗೆ ಸಹಕರಿಸಿದ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಬಲ್ಯಾಯ ಮಾತನಾಡಿ, ಶಾಲೆಯು ಶಿಕ್ಷಣ ಮಾತ್ರವಲ್ಲದೆ ಸಂಸ್ಕಾರ ಸಂಸ್ಕೃತಿಯನ್ನು ಕೂಡ ಕಲಿಸುತ್ತದೆ ಎಂದರು. ಶಾಲಾ ಸುರಕ್ಷತಾ ಸಮಿತಿಯ ಅಧ್ಯಕ್ಷ ಸುರೇಶ್ ಭಟ್ ಸೂರ್ಡೇಲು ಪೋಷಕರು ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕ ವಾತಾವರಣವನ್ನು ಸೃಷ್ಟಿಸಿ ಎಂದು ಹೇಳಿದರು. ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ತಂದು ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಅಖಿಲಾ ಇವರು ಸ್ವಾಗತಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಎಂ ಶಾಲಾ ನೀತಿ ನಿಯಮಗಳನ್ನು ತಿಳಿಸಿದರು. ಶಿಕ್ಷಕಿ ದಿವ್ಯ ಸಾಧಕ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಶಿಕ್ಷಕಿಯರಾದ ಸ್ಮಿತಾ, ಮಧುಶ್ರೀ, ಹರ್ಷಿಣಿ, ಅಂಜಲಿ ಪ್ರಾರ್ಥಿಸಿದರು. ಶಿಕ್ಷಣ ಸಂಯೋಜಕಿ ಶ್ರೀಲಕ್ಷ್ಮೀ ಮೊಳೆಯರ ಕಾರ್ಯಕ್ರಮ ನಿರ್ವಹಿಸಿದರು.