ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು, ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

0

ವಿದ್ಯಾರ್ಥಿಗಳ ಸಾಧನೆಯ ಮೇಲೆ ವಿದ್ಯಾಸಂಸ್ಥೆಯ ಹೆಗ್ಗಳಿಕೆ ಅವಲಂಬಿತ- ಪೇಜಾವರ ಶ್ರೀ

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 2024-25ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡ ಹಾಗೂ ಎನ್‌ಎಮ್‌ಎಮ್‌ಎಸ್ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಜೂ.17ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.


ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮಾಡಿ ಆಶೀರ್ವಚನ ನೀಡಿದ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಅಧ್ಯಕ್ಷರೂ ಆದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು, ಯಾವುದೇ ವಿದ್ಯಾಸಂಸ್ಥೆಯ ಹೆಗ್ಗಳಿಕೆ ಆ ಸಂಸ್ಥೆಯ ಶಾಲಾ ಕಟ್ಟಡ, ಅಲ್ಲಿನ ಸೌಲಭ್ಯ, ಅಲ್ಲಿ ಎಷ್ಟು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ ಎಂಬುದರ ಮೇಲೆ ಅವಲಂಬಿತವಾಗಿಲ್ಲ. ಅಲ್ಲಿನ ವಿದ್ಯಾರ್ಥಿಗಳ ಸಾಧನೆಯ ಮೇಲೆ ಅವಲಂಬಿತವಾಗಿದೆ. ಅಂತಹ ಸಾಧನೆಯನ್ನು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಮಾಡಿದ್ದಾರೆ. ಅವರೆಲ್ಲರನ್ನೂ ಅಭಿನಂದಿಸುವುದಾಗಿ ಹೇಳಿದರು. ವಿದ್ಯಾರ್ಥಿಗಳ ಸಾಧನೆಯ ಹಿಂದೆ ಅಲ್ಲಿನ ಅಧ್ಯಾಪಕರ ಶ್ರಮವೂ ಇದೆ. ಇದರಿಂದಾಗಿಯೇ ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ಸಾಧ್ಯವಾಗಿದೆ. ಪೋಷಕರೂ ತಮ್ಮ ಮಕ್ಕಳನ್ನು ಶಿಕ್ಷಣ ಸಂಸ್ಥೆಗೆ ಕಳಿಸುವಾಗ ಅಲ್ಲಿನ ಶಿಕ್ಷಣದ ಗುಣಮಟ್ಟಕ್ಕೆ ಒತ್ತು ಕೊಡುತ್ತಾರೆ. ಇಲ್ಲಿನ ಶಿಕ್ಷಣ ಸಂಸ್ಥೆಗಳ ಶಿಕ್ಷಣದ ಗುಣಮಟ್ಟ ಇದೇ ರೀತಿ ಮುಂದುವರಿಯಲಿ. ಸಂಸ್ಥೆಯ ಬೆಳವಣಿಗೆಗೆ ಊರವರ ಸಹಕಾರವೂ ಸಿಗಲಿ ಎಂದರು.


ಮುಖ್ಯ ಅತಿಥಿಯಾಗಿದ್ದ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮಾತನಾಡಿ, ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸುವ ಕೆಲಸ ಪೋಷಕರು, ಅಧ್ಯಾಪಕರಿಂದ ಆಗಬೇಕು. ಅಂಕ ಗಳಿಕೆಯೊಂದರಿಂದಲೇ ಪ್ರತಿಭೆ ಗುರುತಿಸುವಂತೆ ಆಗಬಾರದು. ವಿದ್ಯಾರ್ಥಿಗಳೂ ಅಂಕಗಳಿಕೆಗೆ ಸೀಮಿತವಾಗದೇ ಬೇರೆ ಬೇರೆ ಚಟುವಟಿಕೆಗಳಲ್ಲಿ ತೊಡಗಿಕೊಂಡು ಮುಂದೆ ದೇಶದ ಉತ್ತಮ ಪ್ರಜೆಯಾಗಿ ಬೆಳೆಯಬೇಕೆಂದರು.


ಅತಿಥಿಗಳಾಗಿದ್ದ ಫೆಡರಲ್ ಬ್ಯಾಂಕ್ ಕಡಬ ಶಾಖೆ ಮೇನೇಜರ್ ಧನರಾಜ್ ಸಿ.ಆರ್., ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗ ಕಲಾವಿದ ರವಿ ರಾಮಕುಂಜ ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ಕೆ.ರಾಧಾಕೃಷ್ಣ ಕುವೆಚ್ಚಾರು ಅವರು, ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆ 1919ರಲ್ಲಿ ಆರಂಭಗೊಂಡಿದೆ. 1984ರಲ್ಲಿ ಜೂನಿಯರ್ ಕಾಲೇಜು ಆರಂಭಗೊಂಡಿದ್ದು 40 ವರ್ಷ ಪೂರೈಸಿದೆ. ಪ್ರತಿವರ್ಷವೂ ಉತ್ತಮ ಫಲಿತಾಂಶ ದಾಖಲಿಸುತ್ತಿದೆ. ನಗರ ಪ್ರದೇಶದಲ್ಲಿನ ಶಿಕ್ಷಣ ಸಂಸ್ಥೆಗಳು ಹೆಚ್ಚು ಅಂಕಗಳಿಸಿದ ಮಕ್ಕಳನ್ನು ಮಾತ್ರ ದಾಖಲಾತಿ ಮಾಡಿಕೊಂಡು ಹೆಚ್ಚು ಅಂಕ ಪಡೆಯುತ್ತಿವೆ. ಆದರೆ ಗ್ರಾಮೀಣ ಪ್ರದೇಶದಲ್ಲಿರುವ ನಮ್ಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಗೆ ಯಾವುದೇ ನಿರ್ಬಂಧವಿಲ್ಲ. ಆದರೂ ಪ್ರತಿವರ್ಷ ಉತ್ತಮ ಫಲಿತಾಂಶ ಪಡೆಯುತ್ತಿದೆ. ಇದರ ಹಿಂದೆ ಉಪನ್ಯಾಸಕರ ಶ್ರಮವಿದೆ. ಮಕ್ಕಳೊಂದಿಗೆ ಉಪನ್ಯಾಸಕರು ನಿರಂತರ ಸಂಪರ್ಕವಿರಿಸಿಕೊಂಡು ಕಲಿಕೆಗೆ ಒತ್ತು ನೀಡುತ್ತಿದ್ದಾರೆ ಎಂದರು.

ಗೌರವಾರ್ಪಣೆ:
2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮಾಡಲಾಯಿತು. ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ವಿದ್ಯಾರ್ಥಿ ವೇತನಕ್ಕೆ ಆಯ್ಕೆಗೊಂಡ ಸಾಧಕ ವಿದ್ಯಾರ್ಥಿಗಳಿಗೆ, ರಾಜ್ಯ,ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮಾಡಲಾಯಿತು. ಶಿಕ್ಷಕಿ ಉಷಾ, ಶಿಕ್ಷಕ ವೆಂಕಟೇಶ್ ದಾಮ್ಲೆ, ದೈಹಿಕ ಶಿಕ್ಷಣ ಶಿಕ್ಷಕಿ ಪ್ರಪುಲ್ಲ ರೈ, ಪ್ರಾಂಶುಪಾಲ ಚಂದ್ರಶೇಖರ ಕೆ.ಅವರು ವಿದ್ಯಾರ್ಥಿಗಳ ಹೆಸರು ವಾಚಿಸಿದರು. ಸಂಸ್ಥೆಯ ಶಿಕ್ಷಕರು, ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ ಸ್ವಾಮೀಜಿ ಶಾಲು ಹಾಕಿ, ಮಂತ್ರಾಕ್ಷತೆ ನೀಡಿ ಗೌರವಿಸಿದರು.

ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಸುಚೇತಾ ಬರೆಂಬೆಟ್ಟು, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಸಂಚಾಲಕ ಟಿ.ನಾರಾಯಣ ಭಟ್, ಕೋಶಾಧಿಕಾರಿ ಕೆ.ಸೇಸಪ್ಪ ರೈ, ಶ್ರೀ ರಾಮಕುಂಜೇಶ್ವರ ಸಿಬಿಎಸ್‌ಇ ವಿದ್ಯಾಲಯದ ಸಂಚಾಲಕ ಶಿವಪ್ರಸಾದ್ ಇಜ್ಜಾವು, ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲ ಗಣರಾಜ್ ಕುಂಬ್ಳೆ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಪೆರುವಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಚಂದ್ರಶೇಖರ ಕೆ.,ಸ್ವಾಗತಿಸಿ, ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯಶಿಕ್ಷಕ ಸತೀಶ್ ಭಟ್ ವಂದಿಸಿದರು. ಉಪನ್ಯಾಸಕ ಚೇತನ್ ಆನೆಗುಂಡಿ ನಿರೂಪಿಸಿದರು. ಜೀವಿತಾ ಮತ್ತು ಬಳಗದವರು ಪ್ರಾರ್ಥಿಸಿದರು.


ಕ್ಯಾಂಪ್ಕೋ ಆಲಂಕಾರು ಶಾಖೆಗೆ ಜಾಗ ಖರೀದಿ:
ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದಲ್ಲಿ ಈಗ ಕ್ಯಾಂಪ್ಕೋ ಅಡಿಕೆ ಖರೀದಿ ಕೇಂದ್ರ ಕಾರ್ಯಾಚರಿಸುತ್ತಿದೆ. ಆಲಂಕಾರು ಶಾಖೆಗಾಗಿ ಆಲಂಕಾರು ಪೇಟೆ ಸಮೀಪದ ನೆಕ್ಕರೆಯಲ್ಲಿ ಒಂದೂವರೇ ಎಕ್ರೆ ಜಾಗ ಖರೀದಿಸಲಾಗಿದ್ದು ಮುಂದೆ ಇಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ಕುಮಾರ್ ಕೊಡ್ಗಿ ಹೇಳಿದರು. ತುಮಕೂರಿನ ಶಿರಾದಲ್ಲೂ ಸ್ವಂತ ನಿವೇಶನದಲ್ಲಿ ಸಾವಯವ ಗೊಬ್ಬರ ತಯಾರಿಕಾ ಘಟಕವೂ ಆರಂಭಿಸಲಾಗುವುದು. ಕೃಷಿಕರಿಗೆ ಬೇಕಾದ ಪ್ರತಿಯೊಂದು ವ್ಯವಸ್ಥೆಗಳನ್ನೂ ಪೂರೈಸಲು ಕ್ಯಾಂಪ್ಕೋ ಬದ್ಧವಾಗಿದೆ. ಅಡಿಕೆಗೆ ಸ್ಥಿರ ಧಾರಣೆಗೆ ಕ್ಯಾಂಪ್ಕೋ ಪ್ರಯತ್ನಿಸಲಿದೆ ಎಂದು ಕೊಡ್ಗಿ ಹೇಳಿದರು.


ರವಿ ರಾಮಕುಂಜ ಅವರಿಂದ ವಿದ್ಯಾರ್ಥಿ ವೇತನ
ಸಂಸ್ಥೆಯ ಹಿರಿಯ ವಿದ್ಯಾರ್ಥಿಯೂ ಆಗಿರುವ, ತುಳು ಸಿನಿಮಾ, ನಾಟಕ ಕಲಾವಿದ ರವಿ ರಾಮಕುಂಜ ಅವರು ವಾಟ್ಸಫ್ ಮೂಲಕ ರಾಮಕುಂಜ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು ನೀಡುವ ಉದ್ದೇಶದಿಂದ ಈ ವರ್ಷ ಸಂಗ್ರಹಿಸಿದ 41 ಸಾವಿರ ರೂ.ವಿದ್ಯಾರ್ಥಿ ವೇತನವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. 9 ವಿದ್ಯಾರ್ಥಿಗಳಿಗೆ ರವಿ ರಾಮಕುಂಜ ಅವರು ವಿದ್ಯಾರ್ಥಿ ವೇತನ ವಿತರಿಸಿದರು. ಶಿಕ್ಷಕ ರುದ್ರನಾಯ್ಕ್ ಅವರು ವಿದ್ಯಾರ್ಥಿಗಳ ಹೆಸರು ವಾಚಿಸಿದರು.

LEAVE A REPLY

Please enter your comment!
Please enter your name here