ಪುತ್ತೂರು: ಜಾತಿ ನಿಂದನೆ ಆರೋಪ ಎದುರಿಸುತ್ತಿದ್ದ ನೆಲ್ಯಾಡಿ ನಿವಾಸಿಗಳಾದ ಗಣಪಯ್ಯ ಗೌಡ ಹಾಗೂ ಅವರ ಮಗ ಸೋಮಶೇಖರ ಗೌಡರನ್ನು ದೋಷಮುಕ್ತಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.
ನೆಲ್ಯಾಡಿ ಗ್ರಾಮದ ಮೇಲ್ಮಕ್ಕಿ ನಿವಾಸಿ ಅಣ್ಣು ಎಂಬವರು 22-2-2017ರಂದು ರಾತ್ರಿ ಮನೆಯಲ್ಲಿದ್ದ ಸಮಯ ನೆರೆ ಮನೆಯ ಗಣಪಯ್ಯ ಗೌಡ ಮತ್ತು ಅವರ ಮಗ ಸೋಮಶೇಖರ ಗೌಡರವರು ಏಕಾಏಕಿಯಾಗಿ ಅಣ್ಣು ಅವರ ಮನೆಯ ಅಂಗಳಕ್ಕೆ ಬಂದು ಅಣ್ಣು ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ಕೈ ಹಾಗೂ ಕತ್ತಿಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ್ದರು ಎಂದು ಆರೋಪಿಸಲಾಗಿತ್ತು.
ಗಾಯಗೊಂಡಿದ್ದ ಅಣ್ಣು ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಹಳೆದ್ವೇಷದಿಂದ ಈ ಕೃತ್ಯ ಎಸಗಲಾಗಿತ್ತು ಎಂದು ಆರೋಪಿಸಿ ಅಣ್ಣು ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಕೇಸು ದಾಖಲಿಸಿಕೊಂಡು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಇದರ ವಿಚಾರಣೆ ನಡೆಸಿದ ಪುತ್ತೂರಿನ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗಳನ್ನು ದೋಷಮುಕ್ತಗೊಳಿಸಿ ಆದೇಶಿಸಿದೆ. ಆರೋಪಿಗಳ ಪರ ನ್ಯಾಯವಾದಿ ಮಹೇಶ್ ಕಜೆ ವಾದಿಸಿದ್ದರು.