ಜಾಗೃತಿ ಫಲಕ ಪ್ರದರ್ಶನದೊಂದಿಗೆ ಪುತ್ತೂರಿನ ದರ್ಬೆ ವೃತ್ತ ರಸ್ತೆಯಲ್ಲಿ ಬೃಹತ್ ಕಾಲ್ನಡಿಗೆ ಜಾಥಾ
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು , ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪುತ್ತೂರು ಹಾಗೂ ಉಪ ವಿಭಾಗದ ಪೊಲೀಸ್ ಠಾಣೆಗಳ ಸಹಯೋಗದೊಂದಿಗೆ ಜೂ.26ರಂದು ‘ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ’ಯ ಅಂಗವಾಗಿ ಸಾರ್ವಜನಿಕರಿಗೆ ‘ಮಾದಕ ದ್ರವ್ಯದ ಬಗ್ಗೆ ಜಾಗೃತಿ ಮತ್ತು ಅರಿವು ಕಾರ್ಯಕ್ರಮವು’ ಪುತ್ತೂರಿನ ದರ್ಬೆ ಮುಖ್ಯ ರಸ್ತೆಯಲ್ಲಿ ಜಾಗೃತಿ ಕಾಲ್ನಡಿಗೆ ಜಾಥಾದೊಂದಿಗೆ ನಡೆಯಿತು.

ಕಾರ್ಯಕ್ರಮದಲ್ಲಿ ಪುತ್ತೂರು ಉಪ ವಿಭಾಗದ ಡಿ ವೈ ಎಸ್ ಪಿ ಅರುಣ್ ನಾಗೇಗೌಡ ಮಾತನಾಡಿ, ಮಕ್ಕಳಿಗೆ ಮಾದಕ ದ್ರವ್ಯ ಸೇವನೆಯ ಪಿಡುಗನ್ನು ಮತ್ತು ಅದರ ದುಷ್ಪರಿಣಾಮದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯತೆ ಇದೆ ಎಂದು ಹೇಳಿ, ಮಾದಕ ದ್ರವ್ಯದ ಕುರಿತಾಗಿ ವಿದ್ಯಾರ್ಥಿಗಳಿಗೆ ಜಾಗೃತಿಯನ್ನು ಮೂಡಿಸಿದರು.
ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಗಳಾದ ವೈದ್ಯರ್ ಆಯುರ್ವೇದ ಆಸ್ಪತ್ರೆಯ ವೈದ್ಯರಾದ ಡಾ.ಪ್ರಶಾಂತ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಯುವಜನತೆ ಮಾದಕ ದ್ರವ್ಯಗಳ ದಾಸರಾಗುತ್ತಿದ್ದು, ಮಾದಕ ವಸ್ತುವಿನ ವ್ಯಸನದಿಂದ ಮಕ್ಕಳಲ್ಲಿ ತೊಂದರೆಗಳು ಉಂಟಾಗುತ್ತಿವೆ. ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಯುವ ಜನಾಂಗ ಬಲಿಯಾಗುತ್ತಿದೆ ಎಂದು ಮಾದಕ ದ್ರವ್ಯಗಳ ದುಷ್ಪರಿಣಾಮದ ಕುರಿತು ಅರಿವು ಮೂಡಿಸಿದರು.





ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಿಂದ ದರ್ಬೆ ವೃತ್ತದ ವರೆಗೆ ಬೃಹತ್ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಜಾಥವನ್ನು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಉದ್ಘಾಟಿಸಿ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳು ಮಾದಕ ದ್ರವ್ಯ ವಿರೋಧಿ ಫಲಕಗಳನ್ನು ಪ್ರದರ್ಶಿಸಿ ದಿನಾಚರಣೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪುತ್ತೂರು ನಗರ ಠಾಣೆಯ ಇನ್ಸ್ಪೆಕ್ಟರ್ ಜಾನ್ಸನ್ ಡಿ ಸೋಜಾ,ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಉದಯ ರವಿ, ಸಂಪ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜಂಬೂ ರಾಜ್, ಫಾ. ಪತ್ರಾವೋ ಆಸ್ಪತ್ರೆಯ ಸಿಬ್ಬಂದಿ ಜೋನ್ಸನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಬೋಧಕೇತರ ವರ್ಗ ಹಾಗೂ ಪುತ್ತೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾಲೇಜಿನ ಪ್ರಾಂಶುಪಾಲರಾದ ರೆ.ಫಾಅಶೋಕ್ ರಾಯನ್ ಕ್ರಾಸ್ತಾ ಅತಿಥಿಗಳನ್ನು ಸ್ವಾಗತಿಸಿ, ನಗರ ಠಾಣಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ವಂದಿಸಿದರು.