ಆಲಂಕಾರು: ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಆಲಂಕಾರಿನ ಉದ್ಘಾಟನಾ ಕಾರ್ಯಕ್ರಮ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ವಿದ್ಯಾರ್ಥಿ ಸಂಘವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕಡಬ ತಾಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷರು, ಕೊಣಾಲು ಸರಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಶಾಂತರಾಮ ಓಡ್ಲಾ ರವರು ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ಬಡತನ ಯಾವತ್ತೂ ಅಡ್ಡಿಯಾಗುವುದಿಲ್ಲ. ನಿರಂತರ ಪ್ರಯತ್ನ ಮತ್ತು ಗುರಿಯ ಬಗ್ಗೆ ಸ್ಪಷ್ಟತೆ ಇದ್ದರೆ ಯಶಸ್ಸು ಸಾಧಿಸುವುದಕ್ಕೆ ಸಾಧ್ಯವಿದೆ ಎಂದು ತಿಳಿಸಿ ವಿದ್ಯಾರ್ಥಿ ಸಂಘಕ್ಕೆ ಶುಭ ಹಾರೈಸಿದರು.
ಆಡಳಿತ ಮಂಡಳಿ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ ಮಾತನಾಡಿ ವಿಶ್ವದಲ್ಲಿ ಅತೀ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ನಮ್ಮ ದೇಶದಲ್ಲಿ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಇಂತಹ ವಿದ್ಯಾರ್ಥಿ ಸಂಘದ ಚುನಾವಣೆಗಳ ಅವಶ್ಯಕತೆ ಇದೆ ಎಂದು ತಿಳಿಸಿ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸದೊಂದಿಗೆ ನಾಯಕತ್ವ ಗುಣವನ್ನು ರೂಡಿಸಿಕೊಳ್ಳಬೇಕೆಂದರು.
ಆಡಳಿತ ಮಂಡಳಿಯ ಸದಸ್ಯರಾದ ಮುತ್ತಪ್ಪ ಪೂಜಾರಿ ನೆಯ್ಯಲ್ಗ ಸಂದರ್ಭೋಚಿತವಾಗಿ ಮಾತನಾಡಿ ಶುಭಾಹಾರೈಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ತಾರಾನಾಥ ರೈ ನಗ್ರಿ, ಆಡಳಿತಾಧಿಕಾರಿ ಶ್ರೀಪತಿ ರಾವ್ ಎಚ್, ಬೋಧಕ ಬೋಧಕೇತರ ಸಿಬ್ಬಂದಿಗಳು, ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ವಂದನಾ, ದೀಕ್ಷಾ, ಸಾತ್ವಿಕಾ, ಮಾನಸ ರವರು ಪ್ರಾರ್ಥಿಸಿ, ಮುಖ್ಯ ಗುರುಗಳಾದ ನವೀನ್ ರೈಯವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಂಶುಪಾಲರಾದ ರೂಪ ಜೆ ರೈ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಆಂಗ್ಲ ಭಾಷಾ ಶಿಕ್ಷಕರಾದ ಜನಾರ್ಧನ ರವರು ಕಾರ್ಯಕ್ರಮ ನಿರೂಪಿಸಿ, ರಾಜ್ಯಶಾಸ್ತ್ರ ಉಪನ್ಯಾಸಕರಾದ ಪ್ರಶಾಂತ್ ಅವರು ವಂದಿಸಿದರು.