ಪುತ್ತೂರು : ಯಾವುದೇ ಒಂದು ದೇಶದ ಅಭಿವೃದ್ಧಿಯಲ್ಲಿ ಅಲ್ಲಿಯ ಯುವಶಕ್ತಿಯ ಕೊಡುಗೆ ನಿರ್ಣಾಯಕ, ಸಂಶೋಧನೆಗಳು, ಹೊಸತನದ ಹುಡುಕಾಟಗಳು, ಅನ್ವೇಷಣೆ, ಆವಿಷ್ಕಾರಗಳು-ಹೀಗೆ ಎಲ್ಲ ರಂಗಗಳಲ್ಲೂ ಯುವಜನತೆಯ ಉತ್ಸಾಹ, ಪ್ರಾಮಾಣಿಕತೆ ಹಾಗೂ ಸಾಹಸಗಳೇ ದೇಶಗಳ ನಿಜವಾದ ಬಂಡವಾಳವಾಗಿವೆ. ಯುವಕರೇ ದೇಶದ ಶಕ್ತಿ. ಇವರು ತಮ್ಮ ಇಚ್ಛಾಶಕ್ತಿ, ಸಂಕಲ್ಪಶಕ್ತಿ, ಕ್ರಿಯಾಶಕ್ತಿಗಳನ್ನು ಉಪಯೋಗಿಸಿಕೊಂಡು, ಸೃಜನಶೀಲತೆಯಿಂದ ಮುಂದುವರಿದರೆ ದೇಶದ ಸಂಪತ್ತಾಗುತ್ತಾರೆ. ಇವರು ಇಡುವ ಪ್ರತಿಯೊಂದು ಹೆಜ್ಜೆಯಲ್ಲೂ ದೇಶದ ಭವಿಷ್ಯ ಅಡಗಿದೆ ಎಂಬ ಮಾತು ಚಿರಸತ್ಯ. ಶಕ್ತಿಶಾಲಿ, ಉತ್ಸಾಹಿ, ಚೈತನ್ಯಯುಕ್ತ ಯುವಜನರಿಂದಲೇ ದೇಶಕಟ್ಟುವ ಕಾರ್ಯವಾಗಬೇಕು. ಭಾರತೀಯ ಸಂಸ್ಕೃತಿ ಮತ್ತು ರಾಷ್ಟ್ರೀಯತೆ ತಮ್ಮ ಬದುಕಿನ ಭಾಗವಾಗಿಸಿಕೊಳ್ಳಲು ಕಾರ್ಯಪ್ರವೃತ್ತರಾಗಬೇಕು. ದೇಶದ ರಕ್ಷಣೆ ಹಾಗೂ ತಮ್ಮ ರಕ್ಷಣೆಯನ್ನು ಕಾಯ್ದುಕೊಳ್ಳುವಲ್ಲಿ ಯುವಕರು ಸಂಘಟಕರಾಗಬೇಕು. ಎಂದು ಸಾಮಾಜಿಕ ಕಾರ್ಯಕರ್ತರಾದ ಗಣರಾಜ ಭಟ್ ಕೆದಿಲ ಇವರು ಹೇಳಿದರು.
ನರೇಂದ್ರ ಪ.ಪೂ. ಕಾಲೇಜಿನಲ್ಲಿ ನಡೆದ ಯುವಜನತೆ ಮತ್ತು ಭಾರತೀಯತೆ ಎಂಬ ವಿಚಾರದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವಕರು ಆಧುನಿಕತೆ ಮತ್ತು ತಾಂತ್ರಿಕತೆಯ ಹರಿಕಾರರು. ನಿರ್ಭೀತಿ, ಆತ್ಮವಿಶ್ವಾಸ ಧೈರ್ಯ, ಸ್ಥೈರ್ಯ ಮತ್ತು ಶ್ರಮಗಳ ಸಂಗಮ.ತಮ್ಮ ಜ್ಞಾನದ ಪರಿಧಿಯನ್ನು ವಿಸ್ತರಿಸುವ ಸಲುವಾಗಿ ಯುವಕರು ಬೇರೆ ಬೇರೆ ಕ್ಷೇತ್ರಗಳ ಜ್ಞಾನ ಸಂಪಾದಿಸಬೇಕು. ವಿವಿಧ ಕೌಶಲಗಳನ್ನು ಕಲಿತು, ಯೋಗ್ಯತೆ ಹೆಚ್ಚಿಸಿಕೊಳ್ಳಬೇಕು. ಕೌಟುಂಬಿಕ, ಸಾಮಾಜಿಕ, ಔದ್ಯೋಗಿಕ, ಸಾರ್ವತ್ರಿಕ ಮತ್ತು ವೈಯಕ್ತಿಕ ಕ್ಷೇತ್ರಗಳಲ್ಲಿ ಶ್ರೇಷ್ಠತೆಗೆ ಬೇಕಾಗಿರುವ ಕೌಶಲಗಳನ್ನು ಪಡೆದುಕೊಳ್ಳಬೇಕು. ಕಾಲಹರಣ ಮಾಡದೆ, ಕಾರ್ಯಕ್ಷಮತೆಯ ಮನೋಭಾವನ್ನು ಬೆಳೆಸಿಕೊಳ್ಳಬೇಕು. ಬದುಕು ಸುಂದರವಾಗಲು ನಿರಂತರ ಕಲಿಕೆ, ಸತತ ಪರಿಶ್ರಮ, ಸಮಯೋಚಿತ ಪ್ರಜ್ಞೆ, ಪ್ರಾಮಾಣಿಕತೆ, ಪಾರದರ್ಶಕತೆಯನ್ನು ರೂಢಿಸಿಕೊಳ್ಳಬೇಕು. ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದಾಗಿದ್ದು, ಯುವ ಸಮುದಾಯ ತಮ್ಮ ಜವಾಬ್ದಾರಿ ಅರಿತು ವ್ಯಕ್ತಿತ್ವ ವಿಕಸನದ ಜೊತೆಗೆ ಸಾಮಾಜಿಕ ಅಭಿವೃದ್ಧಿಗೆ ಶ್ರಮಿಸಬೇಕೆಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು , ಈ ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ಮತ್ತು ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ದ್ವಿತೀಯ ಪ್ರಥಮ ವಿಜ್ಞಾನ ವಿಭಾಗದ ವಿಧಿಶಾ ಸ್ವಾಗತಿಸಿ, ವಂದಿಸಿದರು.