ಪುತ್ತೂರು: ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ಹಾನಿಗೊಳಗಾಗಿದ್ದು, ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಶಾಸಕರ ಅಭಿವೃದ್ಧಿ ನಿಧಿಯಿಂದ ರೂ.5 ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ.
ಅನುದಾನ ಮಂಜೂರುಗೊಂಡಿರುವ ಹಿನ್ನೆಲೆಯಲ್ಲಿ ಜು.18ರಂದು ಜಿಲ್ಲಾ ಪಂಚಾಯತ್ನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿಯಾಗಿ, ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ ಮತ್ತು ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ಮನವಿ ಪತ್ರವನ್ನೂ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಶಾಸಕರು ಮಾತನಾಡಿ, ಸ್ವಚ್ಛ ಭಾರತ್ ಅಭಿಯಾನದ ಉದ್ದೇಶವನ್ನು ಸಾಧಿಸುವ ದೃಷ್ಟಿಯಿಂದ ಹೆಚ್ಚು ಹಣಕಾಸು ನೆರವು ತರಲು ಪ್ರಯತ್ನಿಸುತ್ತಿದ್ದೇವೆ. ಮುಂದಿನ ಒಂದು ತಿಂಗಳಲ್ಲಿ ಶಂಕುಸ್ಥಾಪನೆ, ಮೂರು ತಿಂಗಳಲ್ಲಿ ಘಟಕ ಕಾರ್ಯಾರಂಭಗೊಳ್ಳುವ ಗುರಿಯಿದೆ. ಈ ಘಟಕ ಮುಂದಿನ 20 ವರ್ಷಗಳ ಅಗತ್ಯಗಳನ್ನು ಪೂರೈಸುವ ಉದ್ದೇಶದಿಂದ ಸುಸಜ್ಜಿತ ತಂತ್ರಜ್ಞಾನದಿಂದ ನಿರ್ಮಾಣಗೊಳ್ಳುತ್ತಿದ್ದು, ಸ್ಥಳೀಯ ಗ್ರಾಮಗಳ ತ್ಯಾಜ್ಯ ನಿರ್ವಹಣೆಗೆ ಬಹುಮುಖ್ಯವಾಗಲಿದೆ. ಪರಿಸರ ಸಂರಕ್ಷಣೆ, ಶುದ್ಧತೆ ಹಾಗೂ ಗ್ರಾಮೀಣ ಆರೋಗ್ಯ ಸುಧಾರಣೆಗೆ ಸಹಾಯಕವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಅವರ ಜೊತೆ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಳೆ, ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ.ಆರ್., ಸಂತೋಷ್ ಕುತ್ತಮೊಟ್ಟೆ, ಭವಾನಿ ತೊಡಿಕಾನ, ಸೇರಿದಂತೆ ಹಲವಾರು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
