ಮಾದಕ ದ್ರವ್ಯ ಸೇವನೆ ಸುಂದರ ಭವಿಷ್ಯಕ್ಕೆ ಮಾರಕ : ಆಂಜನೇಯ ರೆಡ್ಡಿ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಮಂಗಳವಾರ ಮಾದಕದ್ರವ್ಯ ಮತ್ತು ತಂಬಾಕು ಸೇವನೆ ನಿರ್ಮೂಲನಾ ಜಾಗೃತಿ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಅವರು ಮಾತನಾಡಿ, ಆದರ್ಶ ಜೀವನವನ್ನು ರೂಪಿಸಲು ಸಾಂಸ್ಕೃತಿಕ ಮತ್ತು ಸಂಸ್ಕಾರಯುತ ಶಿಕ್ಷಣದ ಅವಶ್ಯಕತೆ ಇದೆ. ದಕ್ಷಿಣಕನ್ನಡ ಜಿಲ್ಲೆ ಅತಿಯಾದ ಮಾದಕವಸ್ತುಗಳ ಸೇವನೆಗೆ ಬಲಿಯಾಗುತಿದ್ದು, ಅದರಲ್ಲೂ ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ವ್ಯಸನಿಗಳಾಗುತ್ತಿದ್ದಾರೆ. ಇದರಿಂದ ಅದೆಷ್ಟು ವಿದ್ಯಾರ್ಥಿಗಳ ಭವಿಷ್ಯವೇ ಹಾಳಾಗಿದೆ. ವಿದ್ಯಾರ್ಥಿ ಜೀವನವೆಂಬುವುದು ಬಂಗಾರದಂತಿದ್ದು, ಕೆಟ್ಟ ಚಟಕ್ಕೆ ಬಲಿಯಾಗಬಾರದು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್. ಮಾತನಾಡಿ ಮಾದಕದ್ರವ್ಯ ಸೇವನೆಯಿಂದ ವಿದ್ಯಾರ್ಥಿಗಳಿಗೆ ಆಗುವ ತೊಂದರೆಯ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಿಶಾನಿ ಕಾರ್ಯಕ್ರಮ ನಿರೂಪಿಸಿದರು.