ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ: ಚಂದ್ರಹಾಸ ಶೆಟ್ಟಿ
ಉಪ್ಪಿನಂಗಡಿ: ವಿದ್ಯಾರ್ಥಿಗಳು ಉನ್ನತ ವ್ಯಾಸಂಗದ ಮಹತ್ವ ಅರಿತು ಶ್ರದ್ಧೆ, ಆಸಕ್ತಿಯಿಂದ ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಂಡು ಯಶಸ್ಸು ಕಂಡುಕೊಳ್ಳಬೇಕು ಎಂದು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ಹೇಳಿದರು.
ಕಾಲೇಜಿನ ಆಂತರಿಕ ಗುಣಮಟ್ಟ ಭರವಸ ಕೋಶ ಮತ್ತು ವಿದ್ಯಾರ್ಥಿ ಕ್ಷೇಮ ಪಾಲನ ವಿಭಾಗ ಆಯೋಜಿಸಿದ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜಿನಲ್ಲಿ ಉತ್ತಮ ಮೂಲಭೂತ ಸೌಕರ್ಯ, ಅನುಭವಿ ಉಪನ್ಯಾಸಕರ ತಂಡ ಇದೆ. ವಿದ್ಯಾರ್ಥಿಗಳು ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು.

2025-26ನೇ ಶೈಕ್ಷಣಿಕ ವರ್ಷದಲ್ಲಿ ಒಟ್ಟು 239 ವಿದ್ಯಾರ್ಥಿಗಳು ಪ್ರಥಮ ಪದವಿಗೆ ದಾಖಲಾತಿ ಮಾಡಿಕೊಂಡಿದ್ದು, ಬಿಎ, ಬಿಬಿಎ, ಬಿಸಿಎ, ಬಿಕಾಂ, ಬಿಎಸ್ಸಿ, ಬಿಎಸ್ಡಬ್ಲ್ಯೂ ಕಾರ್ಯಕ್ರಮಗಳಿಗೆ ಸೇರ್ಪಡೆಗೊಂಡ ಹೊಸ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿನ ಭಾಗವಹಿಸುವಿಕೆಯ ಬಗ್ಗೆ ವಿವರವಾದ ಮಾಹಿತಿಗಳನ್ನು ಈ ಸಂದರ್ಭ ನೀಡಲಾಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ರವಿರಾಜ ಎಸ್. ಪದವಿ ಶಿಕ್ಷಣವನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರವೀಣ್ ಕುಮಾರ್, ಐಕ್ಯೂಎಸಿ ಸಂಚಾಲಕರಾದ ಡಾ.ಹರಿಪ್ರಸಾದ್ ಎಸ್, ಉಪನ್ಯಾಸಕರಾದ ಡಾ. ನಂದೀಶ್ ವೈ.ಡಿ, ಡಾ.ತೇಜಸ್ವಿ ಕುಮಾರ್, ಶ್ರೀಕೃಷ್ಣ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಲಭಿಸುವ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ಡಾ. ಸಂತೋಷ್ ಎಚ್.ಎಸ್. ಮತ್ತು ಮಹೇಶ್ ಜಿ. ಕಾರ್ಯಕ್ರಮ ನಿರ್ವಹಿಸಿದರು.