ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜು ನೆಲ್ಯಾಡಿಯಲ್ಲಿ 2025-26ನೇ ಲಲಿತಾ ಕಲಾ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಆಯ್ಕೆ ಸ್ಪರ್ಧೆ ಕಾರ್ಯಕ್ರಮವು ಸೆ.29ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಯೋಜಕ ಡಾ.ಸುರೇಶ್ ಅವರ ಅನುಪಸ್ಥಿತಿಯಲ್ಲಿ ಡಾ. ಸೀತಾರಾಮ ಪಿ ವಹಿಸಿ, ವ್ಯಕ್ತಿ ಮತ್ತು ಸಮಾಜದ ಸರ್ವತೋಮುಖ ಸಕಾರಾತ್ಮಕ ಬೆಳವಣಿಗೆಯಲ್ಲಿ ಸಾಂಸ್ಕೃತಿಕ ವಿಭಿನ್ನತೆಯ ಅಸ್ಮಿತೆಯ ಉಳಿವು ಮುಖ್ಯವಾದುದು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಯ ಇತಿಹಾಸ ಉಪನ್ಯಾಸಕ, ಆರ್ಯಭಟ ಪ್ರಶಸ್ತಿ ವಿಜೇತ ವಿಶ್ವನಾಥ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾಂಸ್ಕೃತಿಕ ಚಟುವಟಿಕೆಗಳ ಮಹತ್ವದ ಕುರಿತು ವಿವರಿಸಿ ವಿದ್ಯಾರ್ಥಿಗಳು ಮುಂದಿನ ಸಶಕ್ತ ಬದುಕನ್ನು ರೂಪಿಸಿಕೊಳ್ಳಲು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ಈ ಮುಖಾಂತರ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದರು.
ಲಲಿತಾ ಕಲಾ ಸಂಘದ ಸಂಚಾಲಕಿ ಪಾವನ ರೈ ಸ್ವಾಗತಿಸಿದರು. ಉಪನ್ಯಾಸಕಿ ಚಂದ್ರಕಲಾ ವಂದಿಸಿದರು. ದ್ವಿತೀಯ ಬಿಕಾಂ ಕೈರುನ್ನಿಸಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳ ಸಾಂಸ್ಕೃತಿಕ ಆಯ್ಕೆ ಸ್ಪರ್ಧೆಯು ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.