ಮೂರು ಅವಧಿಯಲ್ಲಿ ಚಕ್ರವರ್ತಿ ಸೂಲಿಬೆಲೆ ಅವರಿಂದ ವಿಶೇಷ ಉಪನ್ಯಾಸ
ಪುತ್ತೂರು: ಅಮೇರಿಕಾದ ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಭಾರತದ ಹಿರಿಮೆಯನ್ನು ರಾಷ್ಟ್ರಭಕ್ತ ಸಂತ ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಸಾರಿದರು. 1893ನೇ ಇಸವಿಯ ಸೆಪ್ಟೆಂಬರ್ 11ರಂದು ಸ್ವಾಮಿ ವಿವೇಕಾನಂದರು ಮಾಡಿದ ಐತಿಹಾಸಿಕ ಭಾಷಣದ 132ನೇ ವರ್ಷಾಚರಣೆಯ ಸುಸಂದರ್ಭದಲ್ಲಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ವಿದ್ಯಾಲಯವು ‘ವಿವೇಕ ವಿಜಯ” ಎಂಬ ಶೀರ್ಷಿಕೆಯೊಂದಿಗೆ ವಿಶೇಷ ಉಪನ್ಯಾಸಗಳನ್ನು ಅ.11ರಂದು ನೆಹರು ನಗರದಲ್ಲಿರುವ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದೆ. ಮೂರು ಅವಧಿಯಲ್ಲಿ ವಿಶೇಷ ಉಪನ್ಯಾಸ ನಡೆಯಲಿದೆ ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ರವೀಂದ್ರ ಪಿ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಮೊದಲ ಅವಧಿ ಬೆಳಿಗ್ಗೆ ಗಂಟೆ 9.30ಕ್ಕೆ ವಿವೇಕಾನಂದ ಆವರಣದ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ. ಎಂ. ಕೃಷ್ಣ ಭಟ್ ಅವರು ಉದ್ಘಾಟಿಸಲಿದ್ದಾರೆ. ಚಿಂತಕರು ಹಾಗೂ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರು ವಿದ್ಯಾರ್ಥಿಗಳನ್ನುದ್ದೇಶಿಸಿ ಭಾರತ ವಂದನಾ ವಿವೇಕ ಚಿಂತನ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಈ ಅವಧಿಯಲ್ಲಿ ಭಾಗವಹಿಸಲಿದ್ದಾರೆ.
ಎರಡನೇ ಅವಧಿಯು ಬೆಳಗ್ಗೆ 11.30ಕ್ಕೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಶಿಕ್ಷಕರಿಗಾಗಿ ನಡೆಯಲಿದ್ದು, ಚಕ್ರವರ್ತಿ ಸೂಲಿಬೆಲೆಯವರು ರಾಷ್ಟ್ರ ರಕ್ಷಣಾ – ವಿವೇಕ ಶಿಕ್ಷಣ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ವಿವಿಧ ಶಾಲಾ ಕಾಲೇಜುಗಳ ಸುಮಾರು 250 ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾಗಿ ಬೆಟ್ಟಂಪಾಡಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಭಾಗವಹಿಸಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಎಂ. ಗೋಪಾಲಕೃಷ್ಣ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಮೂರನೇ ಅವಧಿಯಲ್ಲಿ “ಸಿಂಧೂರ ಭಾರತದ ವಿಶ್ವರೂಪ ದರ್ಶನ” ಎಂಬ ವಿಷಯದ ಕುರಿತು ಆಸಕ್ತರಿಗಾಗಿ ವಿಶೇಷ ಅವಧಿ ಹಾಗೂ ಸಂವಾದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಸಂಜೆ ಗಂಟೆ 4.30ಕ್ಕೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆಯವರು ವಿಷಯ ಮಂಡನೆ ನಡೆಸಿ ಸಂವಾದದಲ್ಲಿ ನಡೆಸಿಕೊಡಲಿದ್ದಾರೆ. ಪುತ್ತೂರಿನ ಮಹಾವೀರ ಆಸ್ಪತ್ರೆಯ ಆರ್ಥೋಪೆಡಿಕ್ ಸರ್ಜನ್ ಡಾ. ಸಚಿನ್ ಶಂಕರ್ ಹಾರಕೆರೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ದೇಶದ ಭದ್ರತೆ, ಸಾರ್ವಭೌಮತೆ ಮತ್ತು ಅಖಂಡತೆಗೆ ದೇಶದ ಸಶಸ್ತ್ರ ಪಡೆಗಳ ಕೊಡುಗೆಯನ್ನು ಸ್ಮರಿಸುತ್ತಾ, ಭಾರತದ ಜಾಗತಿಕ ಶಕ್ತಿ ಸಾಮರ್ಥ್ಯದ ವಿಷಯಗಳನ್ನು ಕೇಂದ್ರೀಕರಿಸಿ ಈ ಅವಧಿ ನಡೆಯಲಿದೆ. ಎಂದವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಕೋಶಾಧಿಕಾರಿ ಸಚಿನ್ ಶೆಣೈ, ನಿರ್ದೇಶಕ ಡಾ. ಕೃಷ್ಣಪ್ರಸನ್ನ, ಪ್ರಾಂಶುಪಾಲ ದೇವಿಚರಣ್ ರೈ, ಶೈಕ್ಷಣಿಕ ಸಂಯೋಜಕ ಶ್ರೀವತ್ಸ ಉಪಸ್ಥಿತರಿದ್ದರು.