ಪ್ರಭಾಕರ್ ಭಟ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

0

ಮಂಗಳೂರು: ಕಲ್ಲಡ್ಕ ಪ್ರಭಾಕರ ಭಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ವೇಳೆ ದೂರುದಾರರಾಗಿರುವ ಈಶ್ವರಿ ಪದ್ಮುಂಜ ಬಿಎನ್‌ಎಸ್‌ಎಸ್‌ ಸೆಕ್ಷನ್ 338/339ರ ಅಡಿ ಅವಕಾಶ ಕೋರಿ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ವಿಚಾರಣೆಯನ್ನು ನ.4ಕ್ಕೆ ಮುಂದೂಡಿದೆ.

ಪ್ರಾಸಿಕ್ಯೂಶನ್ ಜೊತೆ ದೂರುದಾರರ ವಕೀಲರ ವಾದವನ್ನೂ ಆಲಿಸಿ ಜಾಮೀನು ನೀಡುವ ಬಗ್ಗೆ ಕೋರ್ಟ್ ವಿವೇಚನೆಯನ್ನು ಬಳಸಿಕೊಳ್ಳಬೇಕು ಎಂದು ಈಶ್ವರಿ ಪದ್ಮುಂಜ ಪರ ಹಿರಿಯ ವಕೀಲ ಸತೀಶನ್ ವಾದ ಮಂಡಿಸಿದ್ದಾರೆ.

ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಭಾಕರ ಭಟ್ ತಮ್ಮ ಭಾಷಣದ ವೇಳೆ “ಆಚೆ ಮನೆಯ ಬ್ಯಾರ್ದಿ ಮಹಿಳೆಯು 7ನೇ ಬಾರಿ ಗರ್ಭಿಣಿಯಾಗಿದ್ದಳು. ನೀನು ನಾಯಿ ಮರಿ ಹಾಕಿದ ಹಾಗೆ ಹಾಕ್ತಾ ಇದ್ದೀಯಾ ಅಂತ ಅವಳಿಗೆ ಯಾರಾದ್ರು ಕೇಳಿದ್ರಾ? ಕೇಳಿದರೆ ಅದು ಅಲ್ಲಾಹನಿಗೋಸ್ಕರ ಅನ್ನುತ್ತಾರೆ. ನೀವೇನಾದರೂ ಮಹಾಲಿಂಗೇಶ್ವರನಿಗಾಗಿ ಮಕ್ಕಳನ್ನು ಮಾಡ್ತೀರಾ? ನಮ್ಮ ಜನಸಂಖ್ಯೆ ಜಾಸ್ತಿಯಾಗಬೇಕು. ಇಲ್ಲದಿದ್ದರೆ ಮಂಗಳೂರು ವಿಧಾನಸಭಾ ಕ್ಷೇತ್ರದ ಉ‌ಳ್ಳಾಲದಲ್ಲಿ ಹಿಂದೂ ಅಭ್ಯರ್ಥಿ ಗೆಲ್ಲಲು ಸಾಧ್ಯವೇ ಇಲ್ಲ. ಯಾಕೆಂದರೆ ಅಲ್ಲಿ ಒಂದು ಲಕ್ಷದ ಹತ್ತು ಸಾವಿರ ಬ್ಯಾರಿಗಳದ್ದೇ ಓಟು ಇದೆ. ನಮ್ಮನ್ನು ಸರ್ವನಾಶ ಮಾಡ್ತಾರೆ. ಹಿಂದೂಗಳು ಬರೇ 90 ಸಾವಿರದಷ್ಟಿದ್ದಾರೆ. ಹಾಗಾಗಿ ನಮ್ಮ ಮನೆಯಲ್ಲಿ 3ಕ್ಕಿಂತ ಕಡಿಮೆ ಮಕ್ಕಳು ಇರಬಾರದು” ಎಂದಿದ್ದರು.

ಈ ದ್ವೇಷ ಭಾಷಣದ ವಿರುದ್ಧ ಜನವಾದಿ ಮಹಿಳಾ ಸಂಘಟನೆಯ ಈಶ್ವರಿ ಪದ್ಮುಂಜ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಪ್ರಭಾಕರ ಭಟ್ ಮತ್ತು ದೀಪೋತ್ಸವ ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು ಬಿಎನ್‌ಎಸ್‌-2023ರ ಸೆಕ್ಷನ್ 79, 196, 299, 302 ಹಾಗೂ 3(5) ಅಡಿಯಲ್ಲಿ ಎಫ್ಐಆರ್ ದಾಖಲಿಸಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಭಾಕರ ಭಟ್ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 27 ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ‘ಬಲವಂತದ ಕ್ರಮ ತೆಗೆದುಕೊಳ್ಳದಂತೆ ಮಧ್ಯಂತರ ಆದೇಶ’ ನೀಡಿ ಪೂರ್ಣ ಪ್ರಮಾಣದ ವಿಚಾರಣೆ ಮತ್ತು ನಿರೀಕ್ಷಣಾ ಜಾಮೀನು ಸಂಬಂಧ ಅದೇಶವನ್ನು ಅಕ್ಟೋಬರ್ 29ಕ್ಕೆ ಮುಂದೂಡಿತ್ತು. ಇಂದು ಈಶ್ವರಿ ಪದ್ಮುಂಜ ಪರ ಹಿರಿಯ ವಕೀಲ ಸತೀಶನ್ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ‘ಆರೋಪಿ ಪ್ರಭಾಕರ ಭಟ್ ಬಂಧನದಿಂದ ರಕ್ಷಣೆ ಪಡೆಯಲು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ. ಆದರೆ ಪ್ರಭಾಕರ್ ಭಟ್ ಜಾಮೀನು ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ವೇಳೆ ಅಗತ್ಯವಾದ ವಿಚಾರಗಳನ್ನು ನ್ಯಾಯಾಲಯದಿಂದ ಮರೆಮಾಚಿದ್ದಾರೆ. ಅದರ ಫಲವಾಗಿ ಅವರಿಗೆ ತಾತ್ಕಾಲಿಕ ರಕ್ಷಣೆ ದೊರೆತಿದೆ’ ಎಂದು ಉಲ್ಲೇಖಿಸಿದ್ದರು.

ಆರೋಪಿ ಪ್ರಭಾಕರ ಭಟ್ ಸಲ್ಲಿಸಿದ ಜಾಮೀನು ಅರ್ಜಿಯಲ್ಲಿ ತಾನು ಕಾನೂನಿನ ಗೌರವವನ್ನು ಹಾಳು ಮಾಡುವವನಲ್ಲ ಎಂದು ಹೇಳಿಕೊಂಡರೂ, ಹಲವು ಬಾರಿ ವಿಭಿನ್ನ ಸಮುದಾಯಗಳ ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡುವ ಹವ್ಯಾಸ ಹೊಂದಿದ್ದಾರೆ. ಮುಸ್ಲಿಂ ಮಹಿಳೆಯರ ವಿರುದ್ಧ ಅವಮಾನಕಾರಿ ಹೇಳಿಕೆಗಳನ್ನು ನೀಡುವುದು ಅವರ ನಿಯಮಿತ ಚಟುವಟಿಕೆಯಾಗಿದೆ. ಈ ಹಿನ್ನೆಲೆಯಲ್ಲಿ, ಆರೋಪಿಯು ಮಾಡಿದ ಅಪರಾಧಗಳ ವಿವರ ಹಾಗೂ ಅವರ ನಡವಳಿಕೆಯ ಇತಿಹಾಸವನ್ನು ನ್ಯಾಯಾಲಯದ ಮುಂದೆ ಮಂಡಿಸುವುದು ಮುಖ್ಯವಾಗಿದೆ. ಈ ರೀತಿ ನ್ಯಾಯಾಲಯದ ಮುಂದೆ ಆರೋಪಿ ಪ್ರಭಾಕರ್ ಭಟ್ ಸಂಪೂರ್ಣ ಇತಿಹಾಸವನ್ನು ಮಂಡಿಸಿದರೆ, ತಾತ್ಕಾಲಿಕ ಅಥವಾ ಪೂರ್ಣ ಜಾಮೀನು ನೀಡುವ ವಿಚಾರದಲ್ಲಿ ನ್ಯಾಯಾಲಯವು ತನ್ನ ವಿವೇಚನೆಯನ್ನು ಬಳಸಲು ನೆರವಾದಂತಾಗುತ್ತದೆ. ಹಾಗಾಗಿ ದೂರುದಾರರಾಗಿರುವ ಈಶ್ವರಿ ಪದ್ಮುಂಜ ಪರವಾಗಿ ಆರೋಪಿ ಪ್ರಭಾಕರ ಭಟ್ ಜಾಮೀನು ಅರ್ಜಿಗೆ ತಕರಾರು ಅರ್ಜಿ ಸಲ್ಲಿಸಲು ಮತ್ತು ವಾದ ಮಂಡಿಸಲು ಅವಕಾಶ ನೀಡುವಂತೆ ಹಿರಿಯ ವಕೀಲ ಸತೀಶನ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಸಹಜವಾಗಿ ಆರೋಪಿ ವಿರುದ್ಧ ಸರ್ಕಾರಿ ವಕೀಲರಿಗೆ ಮಾತ್ರ ವಾದಿಸುವ ಮತ್ತು ತಕರಾರು ಅರ್ಜಿ ಸಲ್ಲಿಸುವ ಅವಕಾಶ ಇರುತ್ತದೆ. ದೂರುದಾರರ ಪರ ವಕೀಲರು ತಕರಾರು ಅರ್ಜಿ ಅಥವಾ ವಾದ ಮಂಡಿಸಬೇಕಾದರೆ ಬಿಎನ್‌ಎಸ್‌ಎಸ್ ಸೆಕ್ಷನ್ 338 ಮತ್ತು 339 ರಂತೆ ಅರ್ಜಿ ಸಲ್ಲಿಸಿ ನ್ಯಾಯಾಲಯದ ಅನುಮತಿ ಪಡೆಯಬೇಕಿದ್ದು, ಇದೀಗ ದೂರುದಾರರ ಪರವಾಗಿ ಹಿರಿಯ ವಕೀಲ ಸತೀಶನ್ ಅರ್ಜಿ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here