





ನೆಲ್ಯಾಡಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ದ.ಕ.ಜಿಲ್ಲೆ ಹಾಗೂ ನೆಲ್ಯಾಡಿ ಸಂತಜಾರ್ಜ್ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಪ.ಪೂ.ಕಾಲೇಜು ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಬಾಲಕ ಹಾಗೂ ಬಾಲಕಿಯರ ಕ್ರಾಸ್ ಕಂಟ್ರಿ ಓಟ ನ.1ರಂದು ನೆಲ್ಯಾಡಿಯಲ್ಲಿ ನಡೆಯಿತು. ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಮೂಡುಬಿದ್ರೆ ಆಳ್ವಾಸ್ ಕಾಲೇಜು ಪಡೆದುಕೊಂಡಿತು.


ಬೆಳಿಗ್ಗೆ ೬.೩೦ಕ್ಕೆ ಪುರುಷರ ವಿಭಾಗದ ಓಟಕ್ಕೆ ವಲಯಮಟ್ಟದ ನೋಡಲ್ ಅಧಿಕಾರಿ ಕುಶಾಲಪ್ಪ ಗೌಡ ಚಾಲನೆ ನೀಡಿದರು. ಮಹಿಳಾ ವಿಭಾಗದ ಓಟಕ್ಕೆ ಬೆಳಿಗ್ಗೆ ೭.೦೦ಕ್ಕೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಚಾಲನೆ ನೀಡಿದರು. ಓಟದ ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ ಶೆಟ್ಟಿ ಮಾತನಾಡಿ, ಶಿಸ್ತು ಎಂಬುದು ಕ್ರೀಡೆಯ ಅವಿಭಾಜ್ಯ ಅಂಗವಾಗಿದೆ. ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕ್ರೀಡೆಯು ಮಹತ್ವದ್ದಾಗಿದೆ. ಸರ್ಕಾರವು ಶಾಲಾ ಹಂತದಿಂದಲೇ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ ಎಂದರು. ಸಂತ ಜಾರ್ಜ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಫಾ.ನೋಮಿಸ್ ಪಿ.ಕುರಿಯಾಕೋಸ್ ಅಧ್ಯಕ್ಷತೆ ವಹಿಸಿದ್ದರು.
ಬೆಳ್ತಂಗಡಿ ಸರ್ಕಾರಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಧಾಕೃಷ್ಣ, ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಸಲಾಂ ಬಿಲಾಲ್ ಶುಭಹಾರೈಸಿದರು. ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ರಾಧಾಕೃಷ್ಣ, ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಚಾರ್ಜ್ ಟಿ.ಎಸ್., ನೆಲ್ಯಾಡಿ ಗ್ರಾ.ಪಂ. ಸದಸ್ಯ ಮಹಮ್ಮದ್ ಇಕ್ಬಾಲ್ ಉಪಸ್ಥಿತರಿದ್ದರು.





ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ದಕ್ಷಿಣ ಕನ್ನಡದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಏಲಿಯಾಸ್ ಎಂ.ಕೆ. ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಮಹಮ್ಮದ್ ಹಾರಿಸ್ ಎನ್. ವಂದಿಸಿದರು. ಕನ್ನಡ ಉಪನ್ಯಾಸಕ ಚೇತನ್ ಕಾರ್ಯಕ್ರಮ ನಿರೂಪಿಸಿದರು.

ಸಮಗ್ರ ಪ್ರಶಸ್ತಿ;
ದ.ಕ.ಜಿಲ್ಲೆಯ ವಿವಿಧ ಕಾಲೇಜುಗಳ ಸುಮಾರು 60 ಬಾಲಕರು ಹಾಗೂ 30 ಬಾಲಕಿಯರು ಕ್ರಾಸ್ ಕಂಟ್ರಿ ಓಟದಲ್ಲಿ ಭಾಗವಹಿಸಿದರು. ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಮೂಡುಬಿದ್ರೆ ಆಳ್ವಾಸ್ ಕಾಲೇಜು ಪಡೆದುಕೊಂಡಿತು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಬಾಲಕರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು, ಬಾಲಕಿಯರ ವಿಭಾಗದಲ್ಲಿ ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.
ವೈಯಕ್ತಿಕ ಪ್ರಶಸ್ತಿ;
ಬಾಲಕರ ವೈಯಕ್ತಿಕ ವಿಭಾಗದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ದರ್ಶನ್ ಪ್ರಥಮ, ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ಸಾಗರ್ ದ್ವಿತೀಯ ಹಾಗೂ ವರುಣ್ ಎಚ್.ಎಲ್.ತೃತೀಯ ಸ್ಥಾನ ಪಡೆದುಕೊಂಡರು. ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ನಾಗಿಣಿ ಪ್ರಥಮ, ಚರಿಷ್ಮಾ ದ್ವಿತೀಯ, ಗಾನ್ವಿ ತೃತೀಯ ಸ್ಥಾನ ಪಡೆದುಕೊಂಡರು.










