ಪುತ್ತೂರು: ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಸರಕಾರ ನಿರ್ಧಾರ ಮಾಡಲಾಗಿದ್ದು, ಕಾಲೇಜು ನಿರ್ಮಾಣ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣ ಕುರಿತಂತೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.
ಗುರುವಾರ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಶಾಸಕರು, ಈ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ದ.ಕ ಜಿಲ್ಲೆಯ ಸರಕಾರಿ ಮೆಡಿಕಲ್ ಕಾಲೇಜು ಪುತ್ತೂರಿನಲ್ಲಿಯೇ ನಿರ್ಮಾಣವಾಗಲಿದೆ. ಎಷ್ಟೇ ಖರ್ಚಾದರೂ ಪರವಾಗಿಲ್ಲ, ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಾಡಿಯೇ ತೀರುತ್ತೇವೆ. ನಮ್ಮದು ನುಡಿದಂತೆ ನಡೆಯುವ ಸರಕಾರವಾಗಿದೆ. ಜನರಿಗೆ ಅಶೋಕ್ ರೈ ಕೊಟ್ಟ ಮಾತನ್ನು ಸರಕಾರ ಉಳಿಸುತ್ತದೆ ಎಂದು ಪುತ್ತೂರಿನಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆಯನ್ನು ಮಾಡಿದ್ದರು. ಇದೀಗ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ ಟೆಂಡರ್ ಪ್ರಕ್ರಿಯೆ ಶೀಘ್ರ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
