





ಬೆಟ್ಟಂಪಾಡಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯ ರಸ್ತೆ ಅಗಲೀಕರಣಕ್ಕೆ ಜಮೀನು ದಾನ ಮಾಡಿದ ಕರುಣಾಕರ ಶೆಟ್ಟಿ ಕೊಮ್ಮಂಡರವರಿಗೆ ದೇವಸ್ಥಾನದ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.


ಪುತ್ತೂರು – ಪಾಣಾಜೆ ಮುಖ್ಯ ರಸ್ತೆಯಿಂದ ದೇವಸ್ಥಾನಕ್ಕೆ ಹೋಗುವ ರಸ್ತೆ ಕಿರಿದಾಗಿದ್ದು, ಇದರಿಂದ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಈ ಬಗ್ಗೆ ರಸ್ತೆಯ ಇಕ್ಕೆಲಗಳಲ್ಲಿರುವ ಜಮೀನಿನ ಮಾಲಕರಾದ ಕರುಣಾಕರ ಶೆಟ್ಟಿ ಕೊಮ್ಮಂಡರವರಿಗೆ ದೇವಳದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ಕುಮಾರ್ ರೈ ಮತ್ತು ಶಶಿಕುಮಾರ್ ರೈ ಬಾಲ್ಯೊಟ್ಟು ರವರ ನೇತೃತ್ವದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿರುವ ಕರುಣಾಕರ ಶೆಟ್ಟಿಯವರು ರಸ್ತೆ ಅಗಲೀಕರಣಕ್ಕೆ ಜಮೀನು ದಾನ ಮಾಡಿದ್ದಾರೆ.





ದೇವಾಲಯದ ಈ ಬಾರಿಯ ಜಾತ್ರೋತ್ಸವದ ವೇಳೆ ಕರುಣಾಕರ ಶೆಟ್ಟಿ ದಂಪತಿಯನ್ನು ಗೌರವಿಸಲಾಯಿತು. ಈ ವೇಳೆ ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ರೈ ಗುತ್ತು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ, ಪ್ರಧಾನ ಕಾರ್ಯದರ್ಶಿ ವಸಂತಕೃಷ್ಣ ಕೋನಡ್ಕ ಮತ್ತಿತರರು ಉಪಸ್ಥಿತರಿದ್ದರು.










